ಬೆಂಗಳೂರು: ‘ಆಹಾರ ಭದ್ರತೆಯ ದೃಷ್ಟಿಯಿಂದ ದೇಶದ ರೈತ ಸಮುದಾಯ ಕೃಷಿಗೆ ಹೆಚ್ಚು ಒತ್ತು ನೀಡಬೇಕಿದ್ದು ಯಂತ್ರಗಳ ಮೂಲಕ ಬೇಸಾಯದಲ್ಲಿ ತೊಡಗಬೇಕಿದೆ’ ಎಂದು ರಕ್ಷಣಾ ಖಾತೆ ರಾಜ್ಯ ಸಚಿವ ಎಂ.ಎಂ. ಪಲ್ಲಂರಾಜು ತಿಳಿಸಿದರು.
ಕರ್ನಾಟಕ ರಾಜ್ಯ ಒಕ್ಕಲಿಗರ ಡೈರಿ ಟ್ರಸ್ಟ್ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಒಕ್ಕಲಿಗರ ಡೈರೆಕ್ಟರಿ ದಶಮಾನೋತ್ಸವ, ಒಕ್ಕಲಿಗ ವರ್ಲ್ಡ್ ವೆಬ್ಸೈಟ್ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರಿಡಲು ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಅವರ ಕ್ರಮವನ್ನು ಸ್ವಾಗತಿಸಿದ ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ, ‘ನಿಲ್ದಾಣದ ಬಳಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಒಳಗೊಂಡ ವಿಶಾಲ ಉದ್ಯಾನ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.
ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಜಗದ್ಗುರು ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಈ ಸಂದರ್ಭದಲ್ಲಿ ಮಾತನಾಡಿದರು. ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಜಗದ್ಗುರು ಅಪರೂಪಕ್ಕೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡದ್ದ ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್, ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ, ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಆಪ್ತಕಾರ್ಯದರ್ಶಿ ಧನಲಕ್ಷ್ಮಿ, ಚಿತ್ರನಟಿ ಪ್ರಿಯಾಹಾಸನ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.
ತಮಿಳುನಾಡು ಒಕ್ಕಲಿಗರ ಸಂಘದ ಅಧ್ಯಕ್ಷ ಪ್ರೊ. ಕೃಷ್ಣಸ್ವಾಮಿ, ನವದೆಹಲಿಯ ಸೀಮಾಸುಂಕ ಮತ್ತು ತೆರಿಗೆ ಸಹಾಯಕ ಆಯುಕ್ತ ದರ್ಶನ್ ಗೌಡ, ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಕೆ.ಟಿ. ಚಂದ್ರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಡಾ. ಬಿ.ಶಿವಲಿಂಗಯ್ಯ, ಯೂನಿಕ್ ಡಿಟೆಕ್ಟೀವ್ ಸೆಕ್ಯೂರಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.