ADVERTISEMENT

ಯಲಹಂಕ: ಸಾಂಕೇತಿಕ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2012, 19:30 IST
Last Updated 5 ಜನವರಿ 2012, 19:30 IST

ಯಲಹಂಕ: ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯನವರ ವರದಿ ಆಧಾರಿತ ಸಮಗ್ರ ನೀರಾವರಿ ಯೋಜನೆಯನ್ನು ಸರ್ಕಾರ ತ್ವರಿತಗತಿಯಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಂತರ್ಜಲ ಅಭಿವೃದ್ಧಿ, ಶುದ್ಧ ಕುಡಿಯುವ ನೀರು ಶಾಶ್ವತ ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಇಲ್ಲಿನ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಉಪ ನಗರದ ಶ್ರೀನಿವಾಸ ದೇವಸ್ಥಾನದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಜಮಾಯಿಸಿ ಸಭೆ ನಡೆಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿ.ಪಂ. ಸದಸ್ಯ ಬಿ.ಚಂದ್ರಪ್ಪ, ರಾಜ್ಯ ಸರ್ಕಾರ ಈ ಭಾಗದ ಜನರಿಗೆ ಯಾವುದೇ ಪ್ರಯೋಜನವಾಗದಂತಹ ಎತ್ತಿನಹೊಳೆ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಕೂಡಲೇ ಇದನ್ನು ಕೈಬಿಡಬೇಕು  ಎಂದು ಆಗ್ರಹಿಸಿದರು.

ಬೆಂಗಳೂರು ಉತ್ತರ ತಾಲ್ಲೂಕು ರೈತ ಸಂಘದ ಕಾರ್ಯದರ್ಶಿ ಕಡತನಮಲೆ ಸತೀಶ್ ಮಾತನಾಡಿದರು. ವಿಶೇಷ ತಹಸೀಲ್ದಾರ್ ರಂಗನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮುನಿ ಆಂಜಿನಪ್ಪ, ಡಿ.ಜಿ. ಅಪ್ಪಯಣ್ಣ, ಪ್ರೇಮ್‌ಕುಮಾರ್, ನಾಗರಾಜಗೌಡ, ಕಾಕೋಳು ಲಕ್ಕಪ್ಪ, ಬೆಂಗಳೂರು ಉತ್ತರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ನಾರಾಯಣರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.