ಬೆಂಗಳೂರು: ಕ್ಷೌರಿಕ ವೃತ್ತಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟವು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.
ಇನ್ನೊಬ್ಬರನ್ನು ಟೀಕಿಸುವ ಭರದಲ್ಲಿ ಕ್ಷೌರಿಕರನ್ನು ಜೇಬುಗಳ್ಳರಿಗೆ ಹೋಲಿಸಿ ಹೇಳಿಕೆ ನೀಡಿದ್ದಾರೆ. ನಮ್ಮ ವೃತ್ತಿಯಲ್ಲಿ ಯಾವುದೇ ಮೋಸ, ವಂಚನೆ ಇಲ್ಲ. ಸಚಿವ ಹೇಳಿಕೆಯಿಂದ ನಮಗೆ ನೋವಾಗಿದೆ. ಸಚಿವರಾಗಿ ಮುಂದುವರೆಯಲು ಅವರು ಯೋಗ್ಯರಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ಮಂಗಳವಾರದೊಳಗೆ ಸಚಿವರನ್ನು ಸಂಪುಟದಿಂದ ವಜಾಗೊಳಿಸದಿದ್ದರೆ ಡೋಲು, ನಾದಸ್ವರಗಳೊಂದಿಗೆ ಕತ್ತರಿ ಹಾಗೂ ಕತ್ತಿ ಹಿಡಿದು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಒಕ್ಕೂಟದ ಅಧ್ಯಕ್ಷ ಟಿ.ತ್ಯಾಗರಾಜ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ನಮ್ಮ ಸಮಾಜದವರು 35 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ನಮ್ಮ ವೃತ್ತಿ ಬಗ್ಗೆ ಸಚಿವರು ಕೀಳಾಗಿ ಮಾತಾನಾಡಿರುವುದು ಅಕ್ಷಮ್ಯ. ಅವರು ಬಹಿರಂಗವಾಗಿ ಕ್ಷಮೆ ಕೋರದಿದ್ದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದರು.
ರಾಜ್ಯ ಸವಿತಾ ಸಮಾಜ ನೌಕರರ ಸಂಘದ ಅಧ್ಯಕ್ಷ ಕೆ.ವಿ.ರಾಜಣ್ಣ, ‘ಅಹಿಂದ ವರ್ಗದ ಏಳಿಗೆಗಾಗಿ ಶ್ರಮಿಸುತ್ತಿರುವುದಾಗಿ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ರಮೇಶ್ ಕುಮಾರ್ ಒಂದು ರೀತಿಯ ಕಪ್ಪು ಚುಕ್ಕೆಯಾಗಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಬೇಕು’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.