ADVERTISEMENT

‘ರಸ್ತೆ ಗುಂಡಿಯಿಂದ ಜನರ ಪ್ರಾಣ ಹೋದರೆ ಅಧಿಕಾರಿಗಳೇ ಹೊಣೆ’

​ಪ್ರಜಾವಾಣಿ ವಾರ್ತೆ
Published 29 ಮೇ 2018, 19:52 IST
Last Updated 29 ಮೇ 2018, 19:52 IST

ಬೆಂಗಳೂರು: ರಸ್ತೆ ಗುಂಡಿಗೆ ಬಿದ್ದು ಯಾರಾದರೂ ಪ್ರಾಣ ಕಳೆದುಕೊಂಡರೆ ಅದಕ್ಕೆ ಅಧಿಕಾರಿಗಳೇ ಹೊಣೆ ಎಂದು ಮೇಯರ್‌ ಆರ್‌.ಸಂಪತ್‌ರಾಜ್‌ ಎಚ್ಚರಿಸಿದರು.

ಮಳೆಗಾಲದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಬಿಬಿಎಂಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಒಂದೇ ಮಳೆಗೆ ರಸ್ತೆ ಕಿತ್ತು ಹೋದ ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಿಲ್‌ ತಡೆಹಿಡಿಯಬೇಕು. ರಸ್ತೆಗಳ ಗುಣಮಟ್ಟವನ್ನು ಪ್ರಮಾಣೀಕರಿಸಿದ ಮೂರನೇ ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಸಬೇಕು. ಗುಣಮಟ್ಟ ಪರಿಶೀಲನೆಯಲ್ಲಿ ಲೋಪ ಅಥವಾ ರಾಜಿ ಮಾಡಿಕೊಂಡ ಪರಿಣಾಮ ಹೀಗಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

ಮಳೆಯಾದ ಸಂದರ್ಭ ಅಧಿಕಾರಿಗಳು ಸ್ಥಳದಲ್ಲಿರಬೇಕು. ಜನರ ಅಹವಾಲುಗಳಿಗೆ ಕೂಡಲೇ ಸ್ಪಂದಿಸಬೇಕು. ಮರ ಬಿದ್ದ ಸಂದರ್ಭದಲ್ಲಿ ಕೂಡಲೇ ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ ಹಂದಿಗಳನ್ನು ತೆರವು ಮಾಡುವುದು, ಅರಣ್ಯ ಇಲಾಖೆಯವರೊಂದಿಗೆ ಸೇರಿ ಬಾವಲಿಗಳನ್ನು ತೆರವು ಮಾಡುವ ಕಾರ್ಯಕ್ಕೆ ಮುಂದಾಗಬೇಕು. ಕಟ್ಟಿಕೊಂಡ ಚರಂಡಿ ತೆರವು ಮಾಡಬೇಕು ಎಂದು ಅವರು ಸೂಚನೆ ನೀಡಿದರು.

ಹೆಚ್ಚುವರಿ ಆಯುಕ್ತ ವಿಜಯಶಂಕರ್‌, ಮುಖ್ಯ ಎಂಜಿನಿಯರ್‌ಗಳು, ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.