ಬೆಂಗಳೂರು: `ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ತಮ್ಮನ್ನು ತೊಡಗಿಸಿಕೊಂಡರೆ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಿದೆ~ ಎಂದು ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾಗೌಡ ಅಭಿಪ್ರಾಯಪಟ್ಟರು.
ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶನಿವಾರ ನಡೆದ 2012-13ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
`ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕತೆ ಹಾಗೂ ಬದ್ಧತೆ ಬಹಳ ಮುಖ್ಯ. ಮಹಿಳೆಯರಲ್ಲಿ ಈ ಗುಣಗಳು ಹೆಚ್ಚು. ಯಾವುದೇ ಕ್ಷೇತ್ರದಲ್ಲಾದರೂ ಮಹಿಳೆಯರು ಹೆಚ್ಚು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯ ಕ್ಷೇತ್ರಕ್ಕೆ ಬಂದು ಭ್ರಷ್ಟಾಚಾರದ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು~ ಎಂದು ಅವರು ಕರೆ ನೀಡಿದರು.
`ಮಹಿಳೆಯರು ಸಮಾಜದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆ ಎಂಬ ಕಾರಣಕ್ಕಾಗೇ ಅವರನ್ನು ತುಳಿಯುವ ಪ್ರಯತ್ನ ಪುರುಷ ಪ್ರಧಾನ ಸಮಾಜದಿಂದ ಆಗುತ್ತಿದೆ. ಇದನ್ನು ಎದುರಿಸಿ ಗುರಿ ತಲುಪಬೇಕಾದ ಸವಾಲು ಮಹಿಳೆಯರ ಮುಂದಿದೆ~ ಎಂದರು.
ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, `ಉನ್ನತ ವಿದ್ಯಾಭ್ಯಾಸವನ್ನು ಪಡೆದು, ಉನ್ನತ ಹುದ್ದೆಗಳಿಗೆ ಏರುವ ಬಗ್ಗೆ ಹೆಣ್ಣು ಮಕ್ಕಳು ಗಂಭೀರವಾಗಿ ಪ್ರಯತ್ನಿಸಬೇಕು~ ಎಂದು ಕರೆ ನೀಡಿದರು.
ನಂತರ ಕಾಲೇಜಿನ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ವಿ.ಕಮಲಮ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಆರ್.ರವಿಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.