ಬೆಂಗಳೂರು: `ರಾಜ್ಯದಲ್ಲಿ ಮಕ್ಕಳ ಸಂಖ್ಯೆ ಎಷ್ಟಿದೆ ಎಂಬುದನ್ನು ಸಮರ್ಪಕವಾಗಿ ಸಮೀಕ್ಷೆ ನಡೆಸಿ ಅದಕ್ಕೆ ಅನುಗುಣವಾಗಿ ಗುಣಮಟ್ಟದ ಆಹಾರ ಪೂರೈಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ವಕೀಲ ಕ್ಲಿಫ್ಟನ್ ಡಿ.ರೋಜಾರಿಯೋ ತಿಳಿಸಿದರು.
ಚೈಲ್ಡ್ ರೈಟ್ಸ್ ಟ್ರಸ್ಟ್ ನಗರದಲ್ಲಿ ಶನಿವಾರ ಆಯೋಜಿಸಿದ್ದ `ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆಗೆ ಕಾರಣ ಮತ್ತು ಪರಿಹಾರಗಳು~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.`ಅಂಗನವಾಡಿಯಲ್ಲಿ ಮಕ್ಕಳಿಗೆ ಪ್ಯಾಕೇಟ್ ಮಾದರಿಯಲ್ಲಿ ಆಹಾರವನ್ನು ಒದಗಿಸಲಾಗುತ್ತಿದೆ. ಇದನ್ನು ರದ್ದು ಮಾಡಿ ಆಯಾ ಪ್ರದೇಶಗಳಲ್ಲಿ ಲಭ್ಯವಿರುವ ಆಹಾರ ಪದಾರ್ಥಗಳನ್ನೇ ಸಮರ್ಪಕವಾಗಿ ಪೂರೈಸುವ ವ್ಯವಸ್ಥೆ ರೂಪುಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು~ ಎಂದರು.
`ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳ ಕೊರತೆಯಿದೆ. ಕೊಳೆಗೇರಿ ಮತ್ತು ಬಡಜನರು ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು. ಅಸ್ತಿತ್ವದಲ್ಲಿರುವ ಅಂಗನವಾಡಿ ಕೇಂದ್ರಗಳು ಮೂಲ ಸೌಕರ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದು ಇದನ್ನು ಸರಿಪಡಿಸಬೇಕು~ ಎಂದು ಆಗ್ರಹಿಸಿದರು.
`ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲ ಮಕ್ಕಳಿಗೆ ಆಹಾರವನ್ನು ಒದಗಿಸಬೇಕು. ಹಸಿವಿನಿಂದ ಯಾವುದೇ ಮಕ್ಕಳು ಸಾಯದಂತೆ ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ~ ಎಂದರು.
ಚೈಲ್ಡ್ ರೈಟ್ಸ್ ಟ್ರಸ್ಟಿ ಡಾ.ಪದ್ಮಿನಿ, `ಅಪೌಷ್ಟಿಕತೆಯ ಸಮಸ್ಯೆಯಿಂದ ದಿನವೊಂದಕ್ಕೆ ಐದು ವರ್ಷದೊಳಗಿನ ಮೂರು ಮಕ್ಕಳು ಮೃತಪಡುತ್ತಿರುವುದು ಆತಂಕದ ಸಂಗತಿ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು~ ಎಂದರು. ಮಕ್ಕಳ ಆಯೋಗದ ಸದಸ್ಯ ವಾಸುದೇವ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.