ADVERTISEMENT

ಲಂಚ ಪ್ರಕರಣ: ಬಂಧನ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2011, 19:30 IST
Last Updated 10 ಅಕ್ಟೋಬರ್ 2011, 19:30 IST

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಗೃಹ ಬಂಧನದಲ್ಲಿಟ್ಟು 3 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸೆಪ್ಟೆಂಬರ್ 21ರಂದು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮೋಹನ್‌ಕುಮಾರ್ ಮತ್ತು ಕಾನ್‌ಸ್ಟೆಬಲ್ ದೊಡ್ಡಸಿದ್ದಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 24ರವರೆಗೆ ವಿಸ್ತರಿಸಲಾಗಿದೆ.

ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಅದೇ ದಿನ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು.

ಸೋಮವಾರ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡಿದ್ದ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 24ರವರೆಗೆ ವಿಸ್ತರಿಸಿ ನ್ಯಾಯಾಧೀಶ ಎನ್. ಕೆ.ಸುಧೀಂದ್ರ ರಾವ್ ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.