ADVERTISEMENT

ಲೋಕಾಯುಕ್ತ ಬಲೆಗೆ ಕಿರಿಯಸಹಾಯಕ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2011, 19:30 IST
Last Updated 28 ಫೆಬ್ರುವರಿ 2011, 19:30 IST

ಬೆಂಗಳೂರು: ಅಂಕಪಟ್ಟಿ ನೀಡಲು ವಿದ್ಯಾರ್ಥಿಯೊಬ್ಬರಿಂದ 500 ರೂಪಾಯಿ ಲಂಚ ಪಡೆಯುತ್ತಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕಿರಿಯ ಸಹಾಯಕ ಮಲ್ಲಿಕಾರ್ಜುನ್ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬೆಂಗಳೂರು ವಿ.ವಿ ವ್ಯಾಪ್ತಿಯಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪೂರೈಸಿದ್ದ ಹಾಸನ ಮೂಲದ ಹರೀಶ್ ಎಂಬ ವಿದ್ಯಾರ್ಥಿ ಅಂಕಪಟ್ಟಿಗಾಗಿ ಅರ್ಜಿ ಸಲ್ಲಿಸಿದ್ದರು. ರೂ 500 ಲಂಚ ನೀಡಿದರೆ ಮಾತ್ರ ಅಂಕಪಟ್ಟಿ ನೀಡುವುದಾಗಿ ಆರೋಪಿ ಕಿರಿಯ ಸಹಾಯಕ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿದ್ಯಾರ್ಥಿ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಸೋಮವಾರ ಮಧ್ಯಾಹ್ನ ಜ್ಞಾನಭಾರತಿಯಲ್ಲಿರುವ ಬೆಂಗಳೂರು ವಿ.ವಿ ಆವರಣದ ಪರೀಕ್ಷಾಂಗ ಕಚೇರಿಯಲ್ಲಿ ಹರೀಶ್ ಅವರಿಂದ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಇನ್‌ಸ್ಪೆಕ್ಟರ್ ರಮೇಶ್ ನೇತೃತ್ವದ ತನಿಖಾ ತಂಡ ಮಲ್ಲಿಕಾರ್ಜುನ್‌ರನ್ನು ಬಂಧಿಸಿದೆ. ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ನಿರ್ಧರಿಸಲಾಗಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.