ADVERTISEMENT

ಲೋಕೋಪಯೋಗಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2013, 19:52 IST
Last Updated 11 ಜೂನ್ 2013, 19:52 IST

ರಾಮನಗರ: ಲೋಕೋಪಯೋಗಿ ಇಲಾಖೆ ಮಾಗಡಿ ಉಪವಿಭಾಗದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಗರದ ಲೋಕೊಪಯೋಗಿ ಇಲಾಖೆಯ ರಾಮನಗರ ವಿಭಾಗದ ಕಾರ್ಯಪಾಲಕ ಎಂಮಿನಿಯರ್ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಮಹತ್ವದ ದಾಖಲೆ ಮತ್ತು ಕಡತಗಳನ್ನು ವಶಪಡಿಸಿಕೊಂಡರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂ 600 ಕೋಟಿಗೂ ಹೆಚ್ಚು ಕಾಮಗಾರಿಗಳನ್ನು ತುಂಡು ಗುತ್ತಿಗೆ ಆಧಾರದ ಮೇಲೆ ಮಾಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆಸಲಾಗಿತ್ತು. ಇದರಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸದನ ಸಮಿತಿ ಶಿಫಾರಸಿನ ಅನ್ವಯ ಇದೀಗ ಲೋಕಾಯುಕ್ತ ದಾಳಿ ನಡೆದಿದೆ.

ಕಳೆದ 4 ರಿಂದ ಲೋಕಾಯುಕ್ತ ಅಧಿಕಾರಿಗಳು ಮಾಗಡಿ ಉಪವಿಭಾಗದ ಲೋಕಾಯುಕ್ತ ಕಚೇರಿ ಸೇರಿದಂತೆ ರಾಮನಗರ ಲೋಕೋಪಯೋಗಿ ಇಲಾಖೆಯ ಮೇಲೂ ನಿರಂತರ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅಂದಿನಿಂದಲೂ ವಿಭಾಗ ವ್ಯಾಪ್ತಿಗೆ ಸಂಬಂಧಿಸಿದಂತೆ 1,547 ಕಾಮಗಾರಿಗಳಿಗೆ ಸಂಬಂಧಿಸಿದ ಕಡತ ತಮ್ಮ ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಡಿವೈಎಸ್‌ಪಿಗಳಾದ ನಿಜಾಮುದ್ದೀನ್, ಗಿರಿಜೇಶ್ ನೇತೃತ್ವದಲ್ಲಿ ಸಬ್ ಇನ್‌ಸ್ಪೆಕ್ಟರ್‌ಗಳಾದ ಪಿ.ಕೆ. ರಾಜು, ಪ್ರದೀಪ್, ಸಂತೋಷ್ ಸಿಬ್ಬಂದಿ ರಾಮಸ್ವಾಮಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು. ಈಗಾಗಲೇ ಗುತ್ತಿಗೆ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರ ಮನೆ ಹಾಗೂ ಆಪ್ತರ ಮನೆ, ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಿದ್ದನ್ನು ಸ್ಮರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.