ADVERTISEMENT

ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಕೆ

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 22 ಮೇ 2018, 19:43 IST
Last Updated 22 ಮೇ 2018, 19:43 IST
ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಈಶಾನ್ಯ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಯಲು ಮಂಗಳವಾರ ನಾಮಪತ್ರ ಸಲ್ಲಿಸಲು ಕಲಬುರ್ಗಿಯ ಮಿನಿ ವಿಧಾನಸೌಧಕ್ಕೆ ಬಂದಿರುವುದು
ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಅವರು ಈಶಾನ್ಯ ಪದವೀಧರ ಕ್ಷೇತ್ರದಿಂದ ಕಣಕ್ಕಿಳಿಯಲು ಮಂಗಳವಾರ ನಾಮಪತ್ರ ಸಲ್ಲಿಸಲು ಕಲಬುರ್ಗಿಯ ಮಿನಿ ವಿಧಾನಸೌಧಕ್ಕೆ ಬಂದಿರುವುದು   

ಕಲಬುರ್ಗಿ: ಈಶಾನ್ಯ ಪದವೀಧರರ ಕ್ಷೇತ್ರದಿಂದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಬೆಂಬಲಿಗರೊಂದಿಗೆ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಏಕೀಕರಣದ ಉದ್ದೇಶ ಇನ್ನೂ ಈಡೇರಿಲ್ಲ. ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳು ಈಗಲೂ ಹಿಂದುಳಿದಿವೆ. ಇದುವರೆಗೆ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳೂ ಈ ಭಾಗವನ್ನು ಕಡೆಗಣಿಸಿವೆ. ಈ ಭಾಗ ಅಭಿವೃದ್ಧಿ ಆಗಬೇಕಾದರೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಗಟ್ಟಿಯಾಗಿ ಹೋರಾಟ ಮಾಡಬೇಕಾಗಿದೆ. ಈ ಕಾರಣಕ್ಕಾಗಿ ಈಶಾನ್ಯ ಪದವೀಧರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.

‘ನಾಡು, ನುಡಿ ಮತ್ತು ಗಡಿ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದೇನೆ. ಅಧಿಕಾರದ ಆಸೆಗಾಗಿ ಎಂದೂ ರಾಜಿಯಾಗಿಲ್ಲ. 371 (ಜೆ) ಕಾಯ್ದೆ, ಮಹದಾಯಿಗೆ ಸಂಬಂಧಿಸಿದಂತೆಯೂ ಹೋರಾಟ ಮಾಡಿದ್ದೇನೆ. ಪದವೀಧರ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿದರೆ ನನ್ನ ಹೋರಾಟಕ್ಕೆ
ಶಕ್ತಿ ಬರುತ್ತದೆ’ ಎಂದು ಹೇಳಿದರು.

ADVERTISEMENT

ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದ ಮಾತನಾಡಿ, ‘ವಾಟಾಳ್ ನಾಗರಾಜ್ ಕನ್ನಡದ ಕೂಗು. ವಿಧಾನಸಭೆ, ವಿಧಾನ ಪರಿಷತ್‌ಗೆ ಇಂತಹವರು ಬೇಕು. ಆದ್ದರಿಂದ ಮತದಾರರು ಅವರಿಗೆ ಆಶೀರ್ವಾದ ಮಾಡಬೇಕು’ ಎಂದು ಮನವಿ ಮಾಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಪ್ರವೀಣಶೆಟ್ಟಿ, ಕೆ.ಆರ್.ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.