ಬೆಂಗಳೂರು: ಉದ್ಯೋಗಾವಕಾಶಗಳು ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಣಿಜ್ಯ ವಿಭಾಗದೆಡೆಗೆ ಆಸಕ್ತಿ ಬೆಳೆಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಎಸ್.ಶಂಕರ ನಾರಾಯಣ್ ಹೇಳಿದರು.
ಉಲ್ಲಾಳು ಮುಖ್ಯ ರಸ್ತೆಯ ಶ್ರೀದೇವಿ ಎಜುಕೇಷನ್ ಟ್ರಸ್ಟ್ನ ಮಂಗಳೂರು ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ತರಗತಿ ಪ್ರಾರಂಭೋತ್ಸವ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯಧಿಕ ಅಂಕ ಗಳಿಸಿದ 2017-18ನೇ ಸಾಲಿನ ಕಾಲೇಜಿನ ಪ್ರತಿಭಾನ್ವಿತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಹಿರಿಯ ವಿಜ್ಞಾನಿ ಎ.ಆರ್.ಶಿವಕುಮಾರ್ ಮಾತನಾಡಿ, ‘ಸ್ಪರ್ಧಾತ್ಮಕ ವಿಜ್ಞಾನ ಕ್ಷೇತ್ರವು ಆಸಕ್ತಿಕರವಾದ ಕ್ಷೇತ್ರಗಳಲ್ಲಿ ಒಂದಾಗಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಂಡು ಸಂಶೋಧನೆಗಳತ್ತ ಆಸಕ್ತಿ ವಹಿಸಬೇಕು. ಜನಸಾಮಾನ್ಯರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುವಂತಹ ಸಂಶೋಧನೆಗಳನ್ನು ಕೈಗೊಂಡು ದೇಶದ ಪ್ರಗತಿಗೆ ಕೈ ಜೋಡಿಸಬೇಕು’ ಎಂದು ಕರೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಡಾ. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.