ಬೆಂಗಳೂರು: ಕರ್ತವ್ಯ ನಿರತ ಎಂಜಿನಿಯರ್ ಮತ್ತು ವಾಲ್ವ್ಮನ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಲಮಂಡಳಿ ಎಂಜಿನಿಯರ್ಗಳು ಕೆಂಪೇಗೌಡ ರಸ್ತೆಯಲ್ಲಿರುವ ಮುಖ್ಯ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
`ಎಂಜಿನಿಯರ್ ಎ. ನಾಗರಾಜ್ ಮತ್ತು ವಾಲ್ವ್ಮನ್ ಮುದ್ದಯ್ಯ ಅವರು ವಿಶ್ವೇಶ್ವರಪುರ ಸೇವಾ ಠಾಣೆ ವ್ಯಾಪ್ತಿಯ ಭವಾನಿನಗರದಲ್ಲಿ ಮಾ.7ರಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಆಗ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ~ ಎಂದು ಜಲಮಂಡಳಿ ಎಂಜಿನಿಯರ್ಗಳ ಸಂಘದ ಅಧ್ಯಕ್ಷ ಎಸ್.ಎಂ. ಬಸವರಾಜು ಹೇಳಿದರು.
`ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು.
ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ಪ್ರತಿಭಟನೆ ನಡೆಸಿದ ಸಿಬ್ಬಂದಿ ಕಪ್ಪು ಬಟ್ಟೆ ಧರಿಸಿ ಕೆಲಸ ಮಾಡಿದರು. ಜಲಮಂಡಳಿ ಅಧ್ಯಕ್ಷ ಗೌರವ್ ಗುಪ್ತಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.