ADVERTISEMENT

`ವಿದ್ಯಾರ್ಥಿಗಳು ಕಲಿತ ಸಂಸ್ಥೆಗೆ ಕೀರ್ತಿ ತರಬೇಕು'

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2013, 19:30 IST
Last Updated 9 ಏಪ್ರಿಲ್ 2013, 19:30 IST

ಯಲಹಂಕ: ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರಂತಹ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿ ಪ್ರಜೆಗಳಾಗಿ ಬೆಳೆಯಬೇಕು ಎಂದು ಕರ್ನಾಟಕ ಪೌರರಕ್ಷಣಾ ದಳದ ಬೆಂಗಳೂರು ಘಟಕದ ಮುಖ್ಯಸ್ಥ ಡಾ.ಪಿ.ಆರ್.ಎಸ್.ಚೇತನ್ ಹೇಳಿದರು.

ಇಲ್ಲಿನ ಶೇಷಾದ್ರಿಪುರ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉತ್ತಮ ವಿದ್ಯಾವಂತರಾಗಿ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಿಕ್ಷಣ ಸಂಸ್ಥೆಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಪೌರರಕ್ಷಣಾ ದಳಕ್ಕೆ ಸೇರಲು ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳಿದ್ದು, ಇದನ್ನು ಸದ್ಬಳಕೆ ಮಾಡಿಕೊಂಡರೆ ತಮ್ಮ ಭವಿಷ್ಯವನ್ನು ಉತ್ತಮ ಮಟ್ಟದಲ್ಲಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೂಡೇ ಪಿ.ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಅತ್ಯುನ್ನತ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಟ್ರಸ್ಟಿ ಡಬ್ಲೂ.ಪಿ. ರಾಮಕೃಷ್ಣ, ಪ್ರಾಂಶುಪಾಲರಾದ ಡಾ.ಎಂ.ಪ್ರಕಾಶ್, ಡಾ.ಎಸ್.ಎನ್.ವೆಂಕಟೇಶ್, ಸಿಬ್ಬಂದಿ ಕಾರ್ಯದರ್ಶಿ ಡಾ.ವಿ.ಡಿ. ಪೋತ್‌ದಾರ್, ಭೂತಾನ್ ಅಸೋಸಿಯೇಶನ್ ಅಧ್ಯಕ್ಷ ಪ್ರೇಂ ಬುಂಗೆ ಮೊದಲಾದವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ಕೆ.ರಾಜೇಶ್ವರಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.