ADVERTISEMENT

ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು: ಗ್ರಾಮೀಣರಿಗೆ ಉಚಿತ ತಾಂತ್ರಿಕ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 19:59 IST
Last Updated 5 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಉಚಿತವಾಗಿ ನೀಡಿ, ಅವರಿಗೆ ಖಾತರಿ ಉದ್ಯೋಗವನ್ನು ಒದಗಿಸಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ವಿಧಾನ ಪರಿಷತ್ ಸದಸ್ಯ ದಯಾನಂದ ಅವರು `ದಯಾನಂದ ಎಜುಕೇಷನಲ್ ಅಂಡ್ ಎಂಪ್ಲಾಯ್‌ಮೆಂಟ್ ಫೋರಂ' ಎಂಬ ಸಂಸ್ಥೆಯನ್ನು ಅಸ್ತಿತ್ವಕ್ಕೆ ತಂದಿದ್ದಾರೆ.


ತಮ್ಮ ಜನ್ಮ ದಿನಾಚರಣೆ ಅಂಗವಾಗಿ ಹೊಸೂರು ರಸ್ತೆಯಲ್ಲಿ ಗುರುವಾರ ಏರ್ಪಡಿಸಿದ್ದ ಶಾಲಾ ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ ದಯಾನಂದ ಅವರು, `ನಮ್ಮ ಸಂಸ್ಥೆಯ ವತಿಯಿಂದ 2010-11ನೇ ಸಾಲಿನಲ್ಲಿ ಆನೇಕಲ್ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ 8 ತರಗತಿಯ 1500 ವಿದ್ಯಾರ್ಥಿಗಳನ್ನು ದತ್ತು ಪಡೆಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಷ್ಟೇ ಸಂಖ್ಯೆಯ ವಿದ್ಯಾರ್ಥಿಗಳನ್ನು ದತ್ತು ಪಡೆಯಲಾಗಿದೆ' ಎಂದರು.

`ದತ್ತು ಪಡೆದ ಮಕ್ಕಳ ಸಂಪೂರ್ಣ ಶಿಕ್ಷಣ ವೆಚ್ಚವನ್ನು ಸಂಸ್ಥೆಯ ವತಿಯಿಂದಲೇ ಭರಿಸಲಾಗುವುದು. 10ನೇ ತರಗತಿಯಲ್ಲಿ ತೇರ್ಗಡೆಯಾಗಿ ತಾಂತ್ರಿಕ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ 2013-14 ನೇ ಸಾಲಿನಿಂದ ಉಚಿತ ತಾಂತ್ರಿಕ ಶಿಕ್ಷಣವನ್ನು ಸಹ ನೀಡಲಾಗುವುದು.`ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಲಿನ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಆದರೆ, ಅದಕ್ಕೆ ಬೇಕಾದ ಶೈಕ್ಷಣಿಕ ಅರ್ಹತೆ ಇಲ್ಲದ ಕಾರಣ ಈ ಉದ್ಯೋಗಾವಕಾಶಗಳು ಬೇರೆ ರಾಜ್ಯದ ಅಭ್ಯರ್ಥಿಗಳ ಪಾಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶಗಳ ಒಂದು ಸಮೀಕ್ಷೆಯನ್ನು ನಡೆಸಲಾಗಿದ್ದು, ಮುಂದಿನ ಮೂರು ವರ್ಷಗಳ ನಂತರ ಸಿಗುವ ಉದ್ಯೋಗಾವಕಾಶಗಳು ಯಾವುವು ಎಂಬುದನ್ನು ಗುರುತಿಸಲಾಗಿದೆ. ಅದಕ್ಕೆ ಬೇಕಾದ ಅರ್ಹತೆಯನ್ನು ಪಡೆಯುವುದು ಹೇಗೆ ಎಂಬುದನ್ನು ಕಂಡುಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಅದರ ಬಗ್ಗೆ ಮಾಹಿತಿ ನೀಡಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಮಾಡುತ್ತಿದ್ದೇವೆ' ಎಂದು ಅವರು ವಿವರಿಸಿದರು.

ಪರಿಸರ ಪ್ರಜ್ಞೆ ಮೂಡಿಸಲು ಪ್ರತಿ ವಿದ್ಯಾರ್ಥಿಯಿಂದಲೂ ಸಸಿ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ 150 ಅಂಗವಿಕಲ ಮಕ್ಕಳಿಗೆ ತ್ರಿಚಕ್ರ ಮೊಪೆಡ್ ವಾಹನ ವಿತರಿಸಲಾಯಿತು. ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT