ಬೆಂಗಳೂರು: ರಾಜ್ಯ ಸರ್ಕಾರವು ಪ್ರೌಢಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ದರದಲ್ಲಿ 100 ರೂಪಾಯಿ ಹೆಚ್ಚಳ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಅಖಿಲ ಭಾರತ ಪ್ರಜಾಸತಾತ್ಮಕ ವಿದ್ಯಾರ್ಥಿಗಳ ಒಕ್ಕೂಟವು ತಿಳಿಸಿದೆ.
ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲಾ ಕಾಲೇಜಿನ ಶುಲ್ಕ ಭರಿಸುವುದು ಕಷ್ಟವಾಗಿರುವ ಸಂದರ್ಭದಲ್ಲಿ ಅನಗತ್ಯ ಬಸ್ ಪಾಸ್ ದರ ಏರಿಸಿರುವುದು ಖಂಡನೀಯ ಎಂದು ಸಂಘಟನೆಯ ಕಾರ್ಯದರ್ಶಿ ಬಿ.ಬಿ.ರವಿನಂದನ್ ಹೇಳಿದ್ದಾರೆ.
ಸರ್ಕಾರವು ಉದ್ಯಮಿಗಳಿಗೆ ಕೋಟ್ಯಂತರ ತೆರಿಗೆ ವಿನಾಯಿತಿ ನೀಡುತ್ತಿದೆ ಅಲ್ಲದೇ ಶಾಸಕ-ಮಂತ್ರಿಗಳ ಸಂಬಳ ಹಾಗೂ ಇತರೆ ಭತ್ಯೆಯನ್ನು ಹೆಚ್ಚಿಸುತ್ತಿದೆ. ಆದರೆ ದೇಶದ ಭವಿಷ್ಯವನ್ನು ರೂಪಿಸುವ ವಿದ್ಯಾರ್ಥಿಗಳ ಬಸ್ ಪಾಸ್ ದರವನ್ನು ಕಡಿಮೆಗೊಳಿಸಲು ಸಾಧ್ಯವಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಬಡ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಬಸ್ಪಾಸ್ ದರ ನಿಗದಿ ಮಾಡಬೇಕು ಇಲ್ಲವಾದರೆ ರಾಜ್ಯದಾದ್ಯಂತ ವಿದ್ಯಾರ್ಥಿಗಳೆಲ್ಲ ಸೇರಿ ಹೋರಾಟ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.