ADVERTISEMENT

ವಿಧಾನಸೌಧಕ್ಕೆ ಮುತ್ತಿಗೆ ಯತ್ನ: ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 19:51 IST
Last Updated 13 ಅಕ್ಟೋಬರ್ 2017, 19:51 IST
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪರಸ್ಪರ ಮಾತಿನ ಚಕಮಕಿ ಉಂಟಾಯಿತು. – ಪ್ರಜಾವಾಣಿ ಚಿತ್ರ
ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪರಸ್ಪರ ಮಾತಿನ ಚಕಮಕಿ ಉಂಟಾಯಿತು. – ಪ್ರಜಾವಾಣಿ ಚಿತ್ರ   

ಬೆಂಗಳೂರು: ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (ಎಬಿವಿಪಿ) ಕಾರ್ಯಕರ್ತರ ಮೇಲೆ ಪೊಲೀಸರು ಶುಕ್ರವಾರ ಲಾಠಿ ಪ್ರಹಾರ ನಡೆಸಿದರು.

‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು (ಕೆಎಸ್‌ಒಯು) ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ’ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಮನವಿ ಪತ್ರ ಸ್ವೀಕರಿಸಲು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಸ್ಥಳಕ್ಕೆ ಬರದಿರುವುದಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಈ ವೇಳೆ ಪೊಲೀಸರು ಅವರನ್ನು ತಡೆದರು. ಪರಸ್ಪರ ಮಾತಿನ ಚಕಮಕಿ ಉಂಟಾಯಿತು. ಪೊಲೀಸರನ್ನು ದೂಡಿ ವಿಧಾನಸೌಧದತ್ತ ನುಗ್ಗಲು ಪ್ರತಿಭಟನಾಕಾರರು ಮುಂದಾದರು. ಹೀಗಾಗಿ, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕೆಲ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳನ್ನು ಬಂಧಿಸಿ ಸಂಜೆ ಬಿಡುಗಡೆಗೊಳಿಸಿದರು.

ADVERTISEMENT

ಸಚಿವರು ಮನವಿ ಸ್ವೀಕರಿಸಲು ಸ್ವಾತಂತ್ರ್ಯ ಉದ್ಯಾನಕ್ಕೆ ಬರಲಿಲ್ಲ. ಹೀಗಾಗಿ, ವಿಧಾನಸೌಧಕ್ಕೆ ಹೋಗಿಯೇ ಮನವಿ ನೀಡಲು ಮುಂದಾದೆವು. ಈ ವೇಳೆ ಪೊಲೀಸರೇ ನಮ್ಮೊಡನೆ ಅನುಚಿತವಾಗಿ ವರ್ತಿಸಿ ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡು ಮಲ್ಲೇಶ್ವರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಕಾರ್ಯಕರ್ತರೊಬ್ಬರು ತಿಳಿಸಿದರು.

ಯುಜಿಸಿ ಮಾನ್ಯತೆ ಸಿಗದಿದ್ದರೆ ಕೆಎಸ್‌ಒಯು ಮಾದರಿಯಲ್ಲೇ ಮತ್ತೊಂದು ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ ಎಂದು ರಾಯರಡ್ಡಿ ಹೇಳಿಕೆ ನೀಡಿರುವುದು ಸರಿಯಲ್ಲ. ಸಚಿವರಿಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇದ್ದರೆ ಕೆಎಸ್‌ಒಯುಗೆ ಮಾನ್ಯತೆ ಕೊಡಿಸಬೇಕು. ಇಲ್ಲವಾದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.