ತಲಘಟ್ಟಪುರ: ಕೆಲವು ನ್ಯಾಯ ಬೆಲೆ ಅಂಗಡಿ ಮಾಲೀಕರು ಪಡಿತರ ಚೀಟಿಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇಂಥವರಿಂದ ಪಡಿತರ ಚೀಟಿಗಳನ್ನು ವಶಪಡಿಸಿಕೊಂಡು ಅರ್ಹ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಬೈಯನಪಾಳ್ಯದಲ್ಲಿ ಬಿಬಿಎಂಪಿ ಮತ್ತು ಬಿಡಿಎ ವತಿಯಿಂದ ಸುಮಾರು ರೂ 25 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
ಯಶವಂತಪುರ ಕ್ಷೇತ್ರದಲ್ಲಿ ಮೂರೂವರೆ ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ 700 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ಕುಡಿಯುವ ನೀರು ಹಾಗೂ ರಸ್ತೆ- ಒಳಚರಂಡಿ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದರು.
ಸ್ಥಳೀಯ ಪಾಲಿಕೆ ಸದಸ್ಯೆ ವೀಣಾ ನಾಗರಾಜು, ವಾರ್ಡ್ನಲ್ಲಿ 12 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆ ಬಂದಾಗ ವೃಷಭಾವತಿ ನದಿ ಉಕ್ಕಿ ಹರಿದು ಕೆಂಗೇರಿ, ಮೈಲಸಂದ್ರ ಮುಂತಾದ ಬಡಾವಣೆಗಳಿಗೆ ನೀರು ನುಗ್ಗಿ ಭಾರಿ ಅನಾಹುತವಾಗುತ್ತಿತ್ತು. ಇದನ್ನು ತಡೆಯಲು ತಡೆಗೊಡೆ ನಿರ್ಮಿಸುವುದಕ್ಕೆ 7 ಕೋಟಿ ರೂಪಾಯಿ ಮಂಜೂರಾಗಿದೆ ಎಂದರು.
ತಾ.ಪಂ.ಮಾಜಿ ಅಧ್ಯಕ್ಷ ಎಚ್. ನಾಗರಾಜು, ಪಾಲಿಕೆ ಜಂಟಿ ಆಯುಕ್ತ ಕೆ.ಎಂ.ರಾಮಚಂದ್ರನ್, ಜಿ.ಪಂ.ಸದಸ್ಯ ಎ.ಶಿವಕುಮಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿಕುಮಾರ್, ಭೂ ಮಂಜೂರಾತಿ ಸಮಿತಿ ಅಧ್ಯಕ್ಷ ವೆಂಕಟಪ್ಪ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.