ADVERTISEMENT

ವಿವಿ ಸಿಂಡಿಕೇಟ್‌ಗೆ ತಜ್ಞರ ನೇಮಕ: ಸಲಹೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 20:01 IST
Last Updated 6 ಸೆಪ್ಟೆಂಬರ್ 2013, 20:01 IST

ಬೆಂಗಳೂರು: `ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗೆ ವಿಷಯತಜ್ಞರು, ಕಾನೂನು ತಜ್ಞರು, ವಿಶ್ರಾಂತ ಕುಲಪತಿಗಳು ಹಾಗೂ ಐಐಟಿ ಪ್ರಾಧ್ಯಾಪಕರನ್ನು ನೇಮಿಸಬೇಕು. ಆಗ ವಿ.ವಿ.ಗಳ ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಬಹುದು' ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್ ಸಲಹೆ ನೀಡಿದರು.

ರಾಜ್ಯ ವಿಶ್ವವಿದ್ಯಾಲಯಗಳ ನಿವೃತ್ತ ಕುಲಪತಿಗಳ ವೇದಿಕೆಯ ವತಿಯಿಂದ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ವೇದಿಕೆಯ ಸಂಸ್ಥಾಪನಾ ದಿನಾಚರಣೆ ಮತ್ತು `ಉನ್ನತ ಶಿಕ್ಷಣ ಸಂಸ್ಥೆಗಳ ಮೌಲ್ಯಮಾಪನ' ಕುರಿತ ವಿಚಾರಸಂಕಿರಣವನ್ನು ಉದ್ಘಾಟಿಸಿ  ಮಾತನಾಡಿದರು.

`ನೈಜ ಅಭಿವೃದ್ಧಿಯ ದೃಷ್ಟಿಯಿಂದ ವಿಶ್ವವಿದ್ಯಾಲಯ ಆಡಳಿತ ಹಾಗೂ ಸ್ಥಳೀಯ ಆಡಳಿತ ಪರಸ್ಪರ ಕೈಜೋಡಿಸಬೇಕು. ಈಗ ವಿದ್ಯಾರ್ಥಿಗಳ ಬೇಡಿಕೆ ಹೆಚ್ಚಾಗಿದೆ. ಅವರ ಬೇಡಿಕೆಗೆ ತಕ್ಕಂತೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಬೇಕಿದೆ. ಸರ್ಕಾರವೂ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಮೀಸಲಿಡುತ್ತಿದೆ. ಸಾಮೂಹಿಕ ಪ್ರಯತ್ನದಿಂದ ಗುರಿ ಮುಟ್ಟಲು ಸಾಧ್ಯ' ಎಂದು ಪ್ರತಿಪಾದಿಸಿದರು.

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.ಕುಲಪತಿ ಡಾ.ಕೆ.ಎಸ್.ಶ್ರೀಪ್ರಕಾಶ್ ಮಾತನಾಡಿ, `ದೇಶದ ಶೇ 68 ವಿ.ವಿ.ಗಳು ಹಾಗೂ ಶೇ 78 ಪದವಿ ಕಾಲೇಜುಗಳು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಮಾನದಂಡಕ್ಕಿಂತ ಕಡಿಮೆ ಗುಣಮಟ್ಟ ಹೊಂದಿವೆ. ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಮೊದಲ ಆದ್ಯತೆ ನೀಡಬೇಕಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.