ಬೆಂಗಳೂರು: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯನ್ನು ಅನುಷ್ಠಾನಕ್ಕೆ ತರಬಾರದೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಸಂಘಟನೆಯ (ಎಸ್ಎಫ್ಐ) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಸರ್ಕಾರ ಕಾಯ್ದೆ ಅನುಷ್ಠಾನಕ್ಕೆ ತರುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರಲು ಮುಂದಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎನ್. ಅನಂತ ನಾಯ್ಕ, ‘ಕಾಯ್ದೆಯ ಹೆಸರಿನಲ್ಲಿ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿಸಲು ಸರ್ಕಾರ ಮುಂದಾಗಿದೆ. ಕಾಯ್ದೆಯಿಂದ ವೃತ್ತಿಶಿಕ್ಷಣದ ಕನಸು ಹೊತ್ತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬೀಳಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಿಗೆ ಶುಲ್ಕ ಹೆಚ್ಚಳದ ಜತೆಗೆ ಮೆರಿಟ್ ಕೋಟಾ ರದ್ದುಗೊಳಿಸಿ ಸೀಟುಗಳ ಭರ್ತಿಯ ಅಧಿಕಾರವನ್ನು ಸಂಪೂರ್ಣವಾಗಿ ಖಾಸಗಿ ಕಾಲೇಜುಗಳ ನಿರ್ಧಾರಕ್ಕೇ ಬಿಡಲು ಸರ್ಕಾರ ಮುಂದಾಗಿದೆ. ಇದರಿಂದ ವೃತ್ತಿಶಿಕ್ಷಣವನ್ನು ಮಾರುಕಟ್ಟೆಯಲ್ಲಿ ಹರಾಜಿಗಿಟ್ಟಂತಾಗುತ್ತದೆ’ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರತಿಭಟನೆಗೆ ಎಪಿವಿಪಿ ಕರೆ: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಬುಧವಾರ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕರೆ ನೀಡಿದೆ.
ಸರ್ಕಾರ ಈ ಕಾಯ್ದೆಯ ಮೂಲಕ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಲು ಮುಂದಾಗಿದ್ದು, ಸರ್ಕಾರದ ಈ ನಡೆಯನ್ನು ಎಲ್ಲರೂ ವಿರೋಧಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.