ADVERTISEMENT

ವೋಲ್ವೊ: ಮುಂದುವರಿದ ಉಪವಾಸ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2011, 20:05 IST
Last Updated 1 ಅಕ್ಟೋಬರ್ 2011, 20:05 IST

ಹೊಸಕೋಟೆ: ಬಹುರಾಷ್ಟ್ರೀಯ ವೋಲ್ವೊ ಕಂಪೆನಿಯ ಆಡಳಿತ ವರ್ಗ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಂಪೆನಿಯ ಕಾರ್ಮಿಕರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 9ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕರ ಮೇಲೆ ವಿನಾಕಾರಣ ದೌರ್ಜನ್ಯ ನಡೆಸುತ್ತಾ ಮೂಲ ಸೌಕರ್ಯಗಳನ್ನು ನೀಡದೆ ಕಿರುಕುಳ ನೀಡುತ್ತಿದ್ದು, ಅದನ್ನು ಪ್ರಶ್ನಿಸಿದ್ದಕ್ಕೆ ಆಡಳಿತ ಮಂಡಳಿ ನಾಲ್ವರು ಕಾರ್ಮಿಕರನ್ನು ಅಮಾನತುಗೊಳಿಸಿತು ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಅಮಾನತಾಗಿರುವವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಇತರ ಕಾರ್ಮಿಕರು ಆ. 2ರಿಂದ ಅನಿರ್ದಿಷ್ಟ ಧರಣಿ ಆರಂಭಿಸಿದ್ದರು. ಆಗ ಮಧ್ಯ ಪ್ರವೇಶಿಸಿದ್ದ ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ, ಅಧಿಕಾರಿಗಳು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸೂಚಿಸಿದ್ದರೂ ಆಡಳಿತ ವರ್ಗ ನೆಲದ ಕಾನೂನಿಗೂ ಬೆಲೆ ಕೊಡದೆ ಹಠಮಾರಿತನದ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾನಿರತ ಕಾರ್ಮಿಕರು ದೂರಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ, 500 ಕಾರ್ಮಿಕರನ್ನು ಬೀದಿಪಾಲು ಮಾಡಲು ಹೊರಟಿರುವ ಕಾರ್ಖಾನೆಯ ಆಡಳಿತ ವರ್ಗದ ವಿರುದ್ಧ ಕ್ರಮ ಜರುಗಿಸಬೇಕು ಎಂದು ಡಿವೈಎಫ್‌ಐ ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಶ್ರೀನಿವಾಸಾಚಾರ್ ಆಗ್ರಹಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.