ಬೆಂಗಳೂರು: ಶಾಲಾ ಸಮಯದಲ್ಲಿ ಶಿಕ್ಷಕರು ಮೊಬೈಲ್ ಬಳಸುವುದನ್ನು ನಿಷೇಧಿಸಲು ಅಧಿಸೂಚನೆ ಹೊರಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿ.ತಿರುವರಂಗ ನಾರಾಯಣಸ್ವಾಮಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಶಾಲಾ ಸಮಯದಲ್ಲಿ ಮೊಬೈಲ್ ಉಪಯೋಗಿಸುವ ಶಿಕ್ಷಕರನ್ನು ಸ್ಥಳದಲ್ಲಿಯೇ ಅಮಾನತುಗೊಳಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಧಿಸೂಚನೆ ಹೊರಡಿಸಬೇಕು’ ಎಂದು ಅವರು ಸೂಚನೆ ನೀಡಿದರು.
‘ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳು ನಡೆಯುವಾಗ ಸಕ್ರಿಯವಾಗಿ ಪರಿಶೀಲನೆ ನಡೆಸಬೇಕು. ಜತೆಗೆ ಕಾಮಗಾರಿಯ ಪೂರ್ಣ ಮಾಹಿ ತಿಯನ್ನು ಸಭೆಗೆ ನೀಡಬೇಕು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಗ್ರಾಮೀಣ ಪ್ರದೇಶದ ಎಲ್ಲ ಫಲಾನುಭವಿಗಳಿಗೂ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದರು.
‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳ ಮುಂಭಾಗ ಗಿಡ-ಗಂಟೆಗಳು ಬೆಳೆದಿವೆ. ಆಸ್ಪತ್ರೆಗಳ ಆವರಣದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಆಸ್ಪತ್ರೆಗಳಲ್ಲಿ ಎಲ್ಲ ಸಮಯದಲ್ಲೂ ಹುಚ್ಚು ನಾಯಿ ಕಡಿತ ಮತ್ತು ಹಾವು ಕಡಿತದ ಔಷಧಿಗಳು ದೊರೆಯುವಂತೆ ದಾಸ್ತಾನಿಡಬೇಕು.
ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಕಾರ್ಯ ವೈಖರಿಯ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾತ್ರಿ ವೇಳೆಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು’ ಎಂದರು. ‘ಜಿಲ್ಲೆಯಲ್ಲಿ ವಾಡಿಕೆಗಿಂತೆ ಹೆಚ್ಚಿನ ಮಳೆಯಾಗಿರುವುದರಿಂದ ನಾಲ್ಕು ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ತಿಂಗಳೊಳಗೆ ಸಸಿ ನೆಡುವ ಕಾರ್ಯವನ್ನು ಪೂರ್ಣಗೊಳಿಸಿ, ಖರ್ಚಾದ ಹಣದ ಬಗ್ಗೆ ಮಾಹಿತಿಯನ್ನು ನೀಡಬೇಕು’ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಳಿಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.