ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಪುತ್ತೂರು ತಾಲ್ಲೂಕಿನ ಐತೂರು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ಖಾಸಗಿ ದೂರು ದಾಖಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೂ ಆರೋಪಿಗಳಲ್ಲಿ ಒಬ್ಬರು ಎಂದು ದೂರಿನಲ್ಲಿ ಹೇಳಲಾಗಿದೆ.ಪುತ್ತೂರಿನ ಕೆ.ಪಿ. ಮೋಹನ್ ಎಂಬುವವರು ಸಲ್ಲಿಸಿರುವ ಈ ದೂರಿನಲ್ಲಿ, `ಐತೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗಖಾತರಿ ಯೋಜನೆ (ನರೇಗಾ) ಅನುಷ್ಠಾನದಲ್ಲಿ 50 ಲಕ್ಷ ರೂಪಾಯಿ ಅವ್ಯವಹಾರ ನಡೆದಿದೆ~ ಎಂದು ದೂರಲಾಗಿದೆ.
ಐತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಹಾಯಕ ಎಂಜಿನಿಯರ್ ಪ್ರಭಾ ಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಾಸುದೇವ ಗೌಡ, ನರೇಗಾ ನಿರ್ದೇಶಕ ಮನೀಷ್ ಮೌದ್ಗಿಲ್ ಹಾಗೂ ಜಿಲ್ಲಾ ಪಂಚಾಯಿತಿ ಒಂಬುಡ್ಸ್ಮನ್ ಶೀನ ಶೆಟ್ಟಿ ಅವರನ್ನೂ ಆರೋಪಿಗಳು ಎಂದು ಹೆಸರಿಸಲಾಗಿದೆ.
ಪಂಚಾಯಿತಿ ಅಧಿಕಾರಿಗಳು ನಕಲಿ ಉದ್ಯೋಗ ಚೀಟಿ ಸೃಷ್ಟಿಸಿ ಬ್ಯಾಂಕ್ನಿಂದ ಹಣ ಪಡೆದಿದ್ದಾರೆ. ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದ್ದರೂ, ಹಳೆಯ ಕಟ್ಟಡವೊಂದರ ಜೀರ್ಣೋದ್ಧಾರ ಕೈಗೊಂಡಿದ್ದಾರೆ ಎಂದು ದೂರಲಾಗಿದೆ. ವಿಚಾರಣೆಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಇದೇ 7ಕ್ಕೆ ಮುಂದೂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.