ಬೆಂಗಳೂರು: ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 1,105 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ವ ಶಿಕ್ಷಣ ಅಭಿಯಾನದ ಅಡಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 29.82 ಕೋಟಿ ರೂಪಾಯಿ ಅನುದಾನ ದೊರೆತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡ ತಿಳಿಸಿದರು.
ಇಲ್ಲಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಅನುಷ್ಠಾನ ಸಮಿತಿಯ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಈ ಅಭಿಯಾನದ ಅಡಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ನಿಗದಿ ಮಾಡಿದ ಅನುದಾನದ 16 ಕೋಟಿ ರೂಪಾಯಿ ಮೊತ್ತದಲ್ಲಿ 13.68 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಆಗಿದೆ~ ಎಂದು ತಿಳಿಸಿದರು.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 115 ಕೊಠಡಿಗಳನ್ನು ಅಗತ್ಯವಿರುವ ಶಾಲೆಗಳಲ್ಲಿ ನಿರ್ಮಿಸಲಾಗುವುದು. ಇದಕ್ಕಾಗಿ ಶಾಲೆಗಳಿಗೆ ತಲಾ 5.45 ಲಕ್ಷ ರೂಪಾಯಿ ನೀಡಲಾಗುವುದು. ಶಾಲೆಗಳ ಆವರಣ ಗೋಡೆ ನಿರ್ಮಾಣಕ್ಕೆ ಈ ಬಾರಿ ಒಟ್ಟು 7.5 ಕೋಟಿ ರೂಪಾಯಿ ವಿನಿಯೋಗಿಸಲಾಗುವುದು ಎಂದರು.
ನಾಲ್ಕು ತಾಲ್ಲೂಕುಗಳಲ್ಲಿ 340 ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಅವರ ಪೈಕಿ 140 ಮಕ್ಕಳನ್ನು ಶಾಲೆಗೆ ಹೋಗುವಂತೆ ಮಾಡಲಾಗಿದೆ. ಈ ಬಾರಿ 19 ಶಾಲೆಗಳಲ್ಲಿ ಹೊಸದಾಗಿ ಕಂಪ್ಯೂಟರ್ ಕಲಿಕೆ ಆರಂಭಿಸಲಾಗುವುದು. 34 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಸಿಬಿಎಸ್ಸಿ ಪಠ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.