ADVERTISEMENT

ಶಾಶ್ವತ ನೀರಾವರಿ ಯೋಜನೆಗಾಗಿ ಧರಣಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 19:30 IST
Last Updated 20 ಮಾರ್ಚ್ 2012, 19:30 IST

ಬೆಂಗಳೂರು:  ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಕ್ಕೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ನಗರ ಸ್ವಾತಂತ್ರ್ಯ ಉದ್ಯಾನದ ಬಳಿ ಮಂಗಳವಾರ ಧರಣಿ ನಡೆಸಿದರು.

ಸಮಿತಿಯ ಸಂಚಾಲಕರಾದ ಆರ್. ಆಂಜನೇಯ ರೆಡ್ಡಿ ಮಾತನಾಡಿ `ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಿಗೆ ಶಾಶ್ವತವಾಗಿ ಶುದ್ಧ ಕುಡಿಯುವ ನೀರು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ, ನೀರಾವರಿ ತಜ್ಞ ಜಿ.ಎಸ್. ಪರಮಶಿವಯ್ಯ ಅವರು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ, ಅದು ಇನ್ನೂ ಜಾರಿಗೆ ಬಂದಿಲ್ಲ. ಈ ಯೋಜನೆಗಳನ್ನು ದಿಕ್ಕು ತಪ್ಪಿಸಲು ಸರ್ಕಾರ ಷಡ್ಯಂತ್ರ ನಡೆಸುತ್ತಿದೆ~ ಎಂದು ಆರೋಪಿಸಿದರು.

ನಮ್ಮ ಭಾಗದ ಜನರಿಗೆ ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲ. ಕೆರೆಗಳೆಲ್ಲಾ ಬತ್ತಿ ಹೋಗಿದ್ದು, ನಾಲ್ಕು ಲಕ್ಷ ಜಾನುವಾರುಗಳು ಕುಡಿಯಲು ನೀರಿಲ್ಲದೆ ನರಳುತ್ತಿವೆ. ಶುದ್ಧ ಕುಡಿಯುವ ನೀರಿಲ್ಲದೆ ಜನ ಕಾಯಿಲೆಗಳಿಗೆ ತುತ್ತಾಗಿದ್ದು, ಮಕ್ಕಳು ಅಂಗವಿಕಲರಾಗಿ ಹುಟ್ಟುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೂ ಪರಮಶಿವಯ್ಯ ಅವರ ವರದಿಯೊಂದೇ ಪರಿಹಾರ ಎಂದು ಅವರು ಹೇಳಿದರು.

ಸರ್ಕಾರ ನಮ್ಮ ಭಾಗಕ್ಕೆ ಯಾವುದೇ ನೀರಾವರಿ ಯೋಜನೆಗಳನ್ನು ಈವರೆಗೂ ಜಾರಿಗೊಳಿಸಿಲ್ಲ. ನಮ್ಮ ಭಾಗದಲ್ಲಿ ಮೂರು ಲಕ್ಷ ಬೋರ್‌ವೆಲ್‌ಗಳು ಕೆಲಸ ಮಾಡುತ್ತಿದ್ದು ಇದರಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದಿನ 15-20 ವರ್ಷಗಳಲ್ಲಿ ಭೂಮಿ ಸಂಪೂರ್ಣ ಬತ್ತಿ ಹೋಗಲಿದೆ.
ನಮ್ಮ ಸಮಸ್ಯೆಗಳನ್ನು ಮನಗಂಡು ಶೀಘ್ರವೇ ಈ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.   
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.