ಬೆಂಗಳೂರು (ಪಿಟಿಐ): ವಿಜಯನಗರ ಕಾಂಗ್ರೆಸ್ ಶಾಸಕ ಎಂ.ಕೃಷ್ಣಪ್ಪ ಹಾಗೂ ಅವರ ಮಗ ಗೋವಿಂದರಾಜ ನಗರ ಶಾಸಕ ಪ್ರಿಯಾ ಕೃಷ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸಿದ್ದಾರೆ.
ಈ ಇಬ್ಬರು ಶಾಸಕರ ಮೇಲೆ ಸುಮಾರು 700 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ ಕುರಿತಂತೆ ಖಾಸಗಿ ದೂರು ದಾಖಲಾಗಿತ್ತು. ವಿಜಯನಗರದಲ್ಲಿರುವ ಮನೆ, ಚಾಲುಕ್ಯ ವೃತ್ತ ಹಾಗೂ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಚೇರಿಗಳ ಮೇಲೆ ಏಕ ಕಾಲಕ್ಕೆ ಪೊಲೀಸರು ದಾಳಿ ನಡೆಸಿ, ಇಬ್ಬರ ಎಟಿಎಂ ಕಾರ್ಡ್ ಗಳು, ಬ್ಯಾಂಕ್ ಖಾತೆಗಳ ವಿವರಗಳನ್ನು ಪರಿಶೀಲನೆ ಮಾಡಿದ್ದಾರೆ.
ಬೆಂಗಳೂರು ಮೂಲದ ವಕೀಲ ಎಚ್.ಸಿ.ಪ್ರಕಾಶ್ ಅವರು ಶಾಸಕ ಕೃಷ್ಣಪ್ಪ, ಅವರ ಪತ್ನಿ ಪ್ರಿಯದರ್ಶಿನಿ ಕೃಷ್ಣಪ್ಪ ಹಾಗೂ ಇಬ್ಬರು ಮಕ್ಕಳಾದ ಪ್ರಿಯಾ ಕೃಷ್ಣ ಹಾಗೂ ಪ್ರದೀಪ್ ಕೃಷ್ಣ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಖಾಸಗಿ ದೂರನ್ನು ಪುರಸ್ಕರಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಜ. 16ರಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ತನಿಖೆ ನಡೆಸುವಂತೆ ಆದೇಶಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.