ADVERTISEMENT

ಶಿಕ್ಷಣದಿಂದ ಮಕ್ಕಳನ್ನು ಸದೃಢಗೊಳಿಸಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2011, 19:50 IST
Last Updated 24 ಜೂನ್ 2011, 19:50 IST
ಶಿಕ್ಷಣದಿಂದ ಮಕ್ಕಳನ್ನು ಸದೃಢಗೊಳಿಸಿ
ಶಿಕ್ಷಣದಿಂದ ಮಕ್ಕಳನ್ನು ಸದೃಢಗೊಳಿಸಿ   

ಬೆಂಗಳೂರು:  `ಮಕ್ಕಳು ಭವಿಷ್ಯದ ನಾಯಕರಾಗಿದ್ದು ಶಿಕ್ಷಣದ ಮೂಲಕ ಅವರನ್ನು ಸದೃಢಗೊಳಿಸಬೇಕಿದೆ~ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅಭಿಪ್ರಾಯಪಟ್ಟರು.

ರಾಜ್ಯಸಭಾ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ನಗರದ ವಸಂತಪುರ ಸರ್ಕಾರಿ ಪ್ರೌಢಶಾಲೆಯ ನೂತನ ಶಾಲಾ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

`ಶಿಕ್ಷಣ ಸುಧಾರಣೆಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಸೌಲಭ್ಯಗಳನ್ನು ಮಕ್ಕಳಿಗೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ~ ಎಂದು ಹೇಳಿದರು.

`ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಶೋಷಿತ ಕುಟುಂಬದ ಹಿನ್ನೆಲೆಯಿಂದ ಬಂದವರು. ಅಂತಹ ವಿದ್ಯಾರ್ಥಿಗಳಿಗೆ ಉತ್ತಮ ಮೂಲ ಸೌಕರ್ಯ ಒದಗಿಸುವ ಉದ್ದೇಶದಿಂದ ಶಾಲಾ ಕಟ್ಟಡ ನಿರ್ಮಿಸಲಾಗಿದೆ. ಹೊಸ ಕಟ್ಟಡದಲ್ಲಿರುವ ವಿವಿಧ ಸೌಕರ್ಯಗಳಿಂದ ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಬಹುದು. ಹಾಗೂ ಅಧ್ಯಯನಕ್ಕೆ ಉತ್ತಮ ವಾತಾವರಣ ಸೃಷ್ಟಿಯಾಗಬಹುದು~ ಎಂದು ಅವರು ತಿಳಿಸಿದರು.

ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, `ಮೊದಲು ಈ ಪ್ರದೇಶ ಕೊಳೆಗೇರಿಗಳಿಂದ ಒತ್ತುವರಿಯಾಗಿತ್ತು. ಸ್ಥಳೀಯ ನಾಯಕರ ಮನವಿ ಮೇರೆಗೆ ಇಲ್ಲಿ ಶಾಲಾ ಕಟ್ಟಡ ನಿರ್ಮಿಸಲಾಯಿತು~ ಎಂದು ಹೇಳಿದರು.
`ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಟ್ಟಡಕ್ಕೆ 45 ಲಕ್ಷ ರೂಪಾಯಿ ಮಂಜೂರಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಸಹಾಯ ಮಾಡುವುದಾಗಿ ಸಂಸದ ರಾಜೀವ್ ಭರವಸೆ ನೀಡಿದ್ದಾರೆ~ ಎಂದು ಅವರು ತಿಳಿಸಿದರು. ಪಾಲಿಕೆ ಸದಸ್ಯೆ ವಿಜಯಾ ರಮೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.