ADVERTISEMENT

ಶೌಚಾಲಯಗಳ ನಿರ್ಮಾಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2013, 20:04 IST
Last Updated 14 ಜುಲೈ 2013, 20:04 IST

ಬೆಂಗಳೂರು: ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸುಸಜ್ಜಿತ ಶೌಚಾಲಯಗಳನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಶೌಚಾಲಯ ನಿರ್ಮಾಣ ಸಾಮಗ್ರಿಗಳೊಂದಿಗೆ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, `ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಶೌಚಾಲಯಗಳ ನಿರ್ಮಾಣದ ಪ್ರಸ್ತಾವವನ್ನೇ ಮಾಡಿಲ್ಲ. ಸರ್ಕಾರ ಜನತೆಗೆ ಅನ್ನ, ನೀರು ಮತ್ತು ಮನೆ ಕೊಟ್ಟರೆ ಸಾಲದು.

ರಾಜ್ಯದ ಗ್ರಾಮೀಣ ಪ್ರದೇಶದ ಮಹಿಳೆಯರು ಶೌಚಾಲಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಮಹಿಳೆಯರ ಅನುಕೂಲಕ್ಕಾಗಿ ಸುಸಜ್ಜಿತ ಶೌಚಾಲಯಗಳನ್ನು ನಿರ್ಮಿಸಿಕೊಡಬೇಕು' ಎಂದು ಆಗ್ರಹಿಸಿದರು.

`ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ಜನರಿದ್ದಾರೆ. ಆದರೆ, ನಗರದಲ್ಲಿ ಸಾರ್ವಜನಿಕರ ಬಳಕೆಗೆ ಯೋಗ್ಯವಾದ, ಶುಚಿಯಾದ ಶೌಚಾಲಯಗಳಿಲ್ಲ. ಬೆಳಿಗ್ಗೆ ವಾಯುವಿಹಾರಕ್ಕೆ ನಗರದ ಉದ್ಯಾನಗಳಿಗೆ ಬರುವ ಜನತೆಗೆ ಶೌಚಾಲಗಳ ಅವಶ್ಯಕತೆ ಇದೆ.

ಅದಕ್ಕಾಗಿ ಸರ್ಕಾರ ನಗರದಲ್ಲಿ 15 ಸಾವಿರ ಹಾಗೂ ರಾಜ್ಯದ ಇತರೆ ನಗರಗಳಲ್ಲಿ ಒಂದು ಲಕ್ಷ ಶೌಚಾಲಯಗಳನ್ನು ನಿರ್ಮಿಸಬೇಕು. ಆಸ್ಪತ್ರೆ, ರೈಲು ನಿಲ್ದಾಣ, ಚಲನಚಿತ್ರ ಮಂದಿರ ಹಾಗೂ ಕಲ್ಯಾಣ ಮಂಟಪಗಳಲ್ಲಿರುವ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದು,  ಸಾರ್ವಜನಿಕ ಶೌಚಾಲಯಗಳ ಶುಚಿತ್ವಕ್ಕೆ ಸರ್ಕಾರ ಒತ್ತು ನೀಡಬೇಕು' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.