ಬೆಂಗಳೂರು: ಕೆಜಿಎಫ್ನ ಬಿಜೆಪಿ ಶಾಸಕ ವೈ.ಸಂಪಂಗಿ ವಿರುದ್ಧ 2009ರಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಲಂಚ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಪ್ರಕಟಿಸಲಿದೆ.
ನಿವೇಶನ ವಿವಾದ ಇತ್ಯರ್ಥಪಡಿಸಲು ಶಾಸಕರು ಐದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕೆಜಿಎಫ್ನ ಉದ್ಯಮಿ ಹುಸೇನ್ ಮೊಯಿನ್ ಫರೂಕ್ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 2009ರ ಜನವರಿ 29ರಂದು ಶಾಸಕರ ಭವನದಲ್ಲಿ ಫರೂಕ್ ಅವರಿಂದ ರೂ 50,000 ನಗದು ಮತ್ತು ರೂ 4.5 ಲಕ್ಷ ಮೌಲ್ಯದ ಚೆಕ್ ಪಡೆಯುತ್ತಿದ್ದ ಆರೋಪದ ಮೇಲೆ ಸಂಪಂಗಿ ಅವರನ್ನು ಬಂಧಿಸಲಾಗಿತ್ತು.
ಪ್ರಕರಣದ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು, 2009ರ ಆಗಸ್ಟ್ನಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ.ಸುಧೀಂಧ್ರ ರಾವ್ ಅವರು ಶನಿವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡುವ ಆದೇಶ ಕುರಿತು ರಾಜ್ಯದಲ್ಲಿ ತೀವ್ರ ಕುತೂಹಲ ಸೃಷ್ಟಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.