ADVERTISEMENT

ಸದಾಶಿವ ವರದಿ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2012, 19:29 IST
Last Updated 6 ಡಿಸೆಂಬರ್ 2012, 19:29 IST

ಬೆಂಗಳೂರು: `ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗವು ನೀಡಿರುವ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು' ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಎನ್.ಮೂರ್ತಿ ಆಗ್ರಹಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಗುರುವಾರ ನಗರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ `ಎ.ಜೆ. ಸದಾಶಿವ ವರದಿಯ ಶಿಫಾರಸುಗಳು' ಕುರಿತು ಅವರು ಮಾತನಾಡಿದರು.

`ಮೀಸಲಾತಿ ನಮಗೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ಶತಮಾನಗಳಿಂದ ಶೋಷಣೆಗೆ ಒಳಪಟ್ಟಿರುವ ನಮಗೆ ಇದು ಹಕ್ಕಾಗಿ ದೊರೆತಿದೆ. ಆದರೆ, ಮೀಸಲಾತಿ ಹಲವು ಕಡೆಯಲ್ಲಿ ದುರುಪಯೋಗವಾಗಿದೆ. ಅದಕ್ಕಾಗಿ ಹಿಂದುಳಿದ ವರ್ಗಗಳಿಗೆ ಕೊಡಮಾಡಿದ ಮೀಸಲಾತಿ ಅವರಿಗೆ ಸರಿಯಾದ ರೀತಿಯಲ್ಲಿ ದೊರೆತಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಸಮೀಕ್ಷೆ ನಡೆಯಲಿ' ಎಂದು ಅವರು ಒತ್ತಾಯಿಸಿದರು.

ತುಮಕೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಓ.ಅನಂತರಾಮಯ್ಯ ಮಾತನಾಡಿ, `ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕತೆಯಲ್ಲಿ ಹಿಂದುಳಿದ ವರ್ಗದವರಿಗೆ ಸಮಾನ ಅವಕಾಶಗಳು ದೊರೆಯಲಿ ಎಂಬ ಆಶಯವನ್ನು ಅಂಬೇಡ್ಕರ್  ಹೊಂದಿದ್ದರು. ಜನ ಶಿಕ್ಷಿತರಾಗಿ ತಮ್ಮ ನಿರ್ಧಾರಗಳನ್ನು ತಾವೇ ಕೈಗೊಳ್ಳುಬೇಕು ಎಂದು ಬಯಸಿದ್ದರು' ಎಂದರು.

`ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಯಥಾವತ್ತಾಗಿ ಜಾರಿಗೆ ತಂದರೆ ಮತ ಬ್ಯಾಂಕ್ ರಾಜಕಾರಣಕ್ಕೆ ಅಡ್ಡಿಯಾಗುತ್ತದೆ ಎಂಬ ಅಂಶದಿಂದ ವರದಿ ಜಾರಿಗೆ ತರಲು ಹಿಂದೇಟು ಹಾಕುತ್ತಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.