ADVERTISEMENT

ಸರ್ಕಾರದ ಸೌಲಭ್ಯಗಳನ್ನು ಮನವರಿಕೆ ಮಾಡಿ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2012, 19:05 IST
Last Updated 15 ಏಪ್ರಿಲ್ 2012, 19:05 IST

ಹೊಸಕೋಟೆ: ಮಕ್ಕಳ ಕಲಿಕೆಗೆ ಸರ್ಕಾರ ಹತ್ತು ಹಲವಾರು ಸೌಲಭ್ಯಗಳನ್ನು ಕಲ್ಪಿಸಿದ್ದು ಅದನ್ನು ಪೋಷಕರಿಗೆ ಮನವರಿಕೆ ಮಾಡುವುದರ ಮೂಲಕ ಶಿಕ್ಷಕರು ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೆಂಕಟೇಶಪ್ಪ ಸಲಹೆ ಮಾಡಿದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪಟ್ಟಣದ ಕೆಜಿಕೆಎಂಎಸ್ ಶಾಲೆ ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಮಕ್ಕಳ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಪ್ರತಿ ವರ್ಷ ಕಡಿಮೆ ಆಗುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು, ದಾಖಲಾತಿ ಹೆಚ್ಚಿಸುವಲ್ಲಿ ಸರ್ಕಾರದಿಂದ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಪಟ್ಟಿಮಾಡಿ ಅದರ ಕರಪತ್ರವನ್ನು ಪೋಷಕರಿಗೆ ಹಂಚುವ ಮೂಲಕ ಮನವೊಲಿಸಲು ಮುಂದಾಗಬೇಕು. ಈ ವಿನೂತನ ಕಾರ್ಯಕ್ರಮ ರಾಜ್ಯದಲ್ಲೇ ಪ್ರಥಮವಾಗಿದೆ ಎಂದು ಹೇಳಿದರು.

ದಾಖಲಾತಿ ಹೆಚ್ಚಿಸುವಲ್ಲಿ ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಗುಣಮಟ್ಟದ ಕಲಿಕೆಗೆ ಬೇಕಾದ ಪೂರಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ ಮಕ್ಕಳ ಪ್ರಗತಿಯನ್ನು ಪೋಷಕರಿಗೆ ಸಾದರಪಡಿಸುವ ಕಾರ್ಯಕ್ರಮವನ್ನು ಹೆಚ್ಚು ಹಮ್ಮಿಕೊಳ್ಳಬೇಕಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಉಮೇಶ್‌ರಾಜು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್ ಮುಖ್ಯ ಶಿಕ್ಷಕ ಕೆ.ರಮೇಶ್, ಅಕ್ಷರ ದಾಸೋಹ ಅಧಿಕಾರಿ ವೆಂಕಟೇಶಪ್ಪ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಣ್ಣ, ಮುನಿರಾಜು ಉಪಸ್ಥಿತರಿದ್ದರು. ಕೆ.ವಿ.ಶ್ರೀಕಾಂತ್ ಸ್ವಾಗತಿಸಿದರು.

ಅಪರಿಚಿತ ವ್ಯಕ್ತಿಯ ಶವ ಪತ್ತೆ: ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದ ಬಳಿ ಅಪರಿಚಿತ ವ್ಯಕ್ತಿಯ ಶವವೊಂದು ಭಾನುವಾರ ಪತ್ತೆಯಾಗಿದೆ. ಕೊಳೆತು ನಾರುತ್ತಿದ್ದ ಸುಮಾರು 40 ವರ್ಷ ವಯಸ್ಸಿನ ಈ ವ್ಯಕ್ತಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ನೀಲಿ ಮಿಶ್ರಿತ ತುಂಬು ತೋಳಿನ ಅಂಗಿ ಧರಿಸಿದ್ದ. ಪೊಲೀಸರು ಅಸ್ವಾಭಾವಿಕ ಮರಣ ಮೊಕದ್ಧಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.