ಬೆಂಗಳೂರು: `ಪ್ರತಿಷ್ಠಿತ ಶಾಲೆಗಳು ಬುದ್ಧಿವಂತ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡು ಮತ್ತಷ್ಟು ಬುದ್ಧಿವಂತರನ್ನಾಗಿ ಮಾಡುತ್ತಿವೆ. ಸಾಮಾನ್ಯ ಹಾಗೂ ದಡ್ಡ ವಿದ್ಯಾರ್ಥಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ' ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ಪ್ರತಿಭಾ ಅಕಾಡೆಮಿಯ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಈಚೆಗೆ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿ, `ವಿದ್ಯಾರ್ಥಿಗಳ ಬುದ್ಧಿವಂತಿಕೆ ಹೆಚ್ಚಿಸಲು ಶಿಕ್ಷಕರು ಗಮನ ಹರಿಸಬೇಕು' ಎಂದು ಕಿವಿಮಾತು ಹೇಳಿದರು.
`ದಡ್ಡ ವಿದ್ಯಾರ್ಥಿಗಳ ಉನ್ನತಿಗಾಗಿ ಚಿತ್ರದುರ್ಗದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಶಾಲೆಯನ್ನು ನಿರ್ಮಾಣ ಮಾಡಲಾಗುವುದು. ಇಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಮೊದಲ ಆದ್ಯತೆ ನೀಡಲಾಗುವುದು' ಎಂದರು.
ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಸೋಮಶೇಖರ್ ಉಪನ್ಯಾಸ ನೀಡಿದರು.
ರಾಜ್ಯ ಸಹಕಾರಿ ಮಹಾಮಂಡಳಿ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ, ಅಕಾಡೆಮಿಯ ಅಧ್ಯಕ್ಷ ಶಂಕರ್ ಬಿ.ಪಾಟೀಲ್ ಉಪಸ್ಥಿತರಿದ್ದರು. ಈ ಸಂದರ್ಭ ಶಿಕ್ಷಕರಿಗೆ ಭಾರತರತ್ನ ಡಾ.ಎಸ್. ರಾಧಾಕೃಷ್ಣನ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.