ಬೆಂಗಳೂರು: ಸಾಲ ವಾಪಸ್ ಕೇಳಲು ಬಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ಟೆಬಲ್, ಸಾಕು ನಾಯಿಯನ್ನು ಬಿಟ್ಟು ಕಚ್ಚಿಸಿದ ಘಟನೆ ತ್ಯಾಗರಾಜನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ತ್ಯಾಗರಾಜನಗರದ ಮುನೇಶ್ವರ ದೇವಸ್ಥಾನದ ಬಳಿಯ ನಿವಾಸಿ ಶಿವಣ್ಣ ಹಲ್ಲೆಗೊಳಗಾದವರು. ಹಲ್ಲೆ ನಡೆಸಿದ ಆರೋಪದ ಮೇಲೆ ನಗರ ಸಶಸ್ತ್ರ ಪಡೆಯ ಪೊಲೀಸ್ ಕಾನ್ಸ್ಟೆಬಲ್ ರಾಜಣ್ಣ ಎಂಬುವರ ಮೇಲೆ ತ್ಯಾಗರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಣ್ಣ ಕೊಳಾಯಿ ರಿಪೇರಿ ಕೆಲಸ ಮಾಡುತ್ತಾರೆ. ಅವರ ಪತ್ನಿ ಭಾರತಿ ಅವರು ರಾಜಣ್ಣ ಅವರಿಗೆ ಒಂದೂವರೆ ವರ್ಷದ ಹಿಂದೆ ಸಾಲ ನೀಡಿದ್ದರು. ಆದರೆ ಅವರು ಸಾಲವನ್ನು ಹಿಂತಿರುಗಿಸಿರಲಿಲ್ಲ. ಹಣ ಕೇಳಲು ಶಿವಣ್ಣ, ರಾಜಣ್ಣ ಅವರ ತ್ಯಾಗರಾಜನಗರದ ನಿವಾಸಕ್ಕೆ ಹೋಗಿದ್ದಾಗ ಇಬ್ಬರ ಮಧ್ಯೆ ಜಗಳವಾಗಿದೆ.
ಶಿವಣ್ಣ ಅವರ ಮೇಲೆ ಹಲ್ಲೆ ನಡೆಸಿದ ರಾಜಣ್ಣ ಸಾಕು ನಾಯಿಯನ್ನು ಬಿಟ್ಟು ಕಚ್ಚಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಶಿವಣ್ಣ ಅವರು ಚಿಕಿತ್ಸೆ ಪಡೆದಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವೇಶ್ಯಾವಾಟಿಕೆ: ಬಂಧನ
ಮೈಕೊಲೇಔಟ್ನ ತಾವರೆಕೆರೆ ಮುಖ್ಯ ರಸ್ತೆಯಲ್ಲಿರುವ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಹೈದರಾಬಾದ್ ಮೂಲದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಹೊಸಕೋಟೆಯ ಮೂರ್ತಿ (23), ತಾವರೆಕೆರೆ ಮುಖ್ಯ ರಸ್ತೆ ನಿವಾಸಿ ರವಿಕುಮಾರ್ (30) ಬಂಧಿತ ಆರೋಪಿಗಳು. ಇಂಟರ್ನೆಟ್ ಮೂಲಕ ಗ್ರಾಹಕರನ್ನು ಸಂಪರ್ಕಿಸುತ್ತಿದ್ದ ಅವರು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಆರೋಪಿಗಳಿಂದ ನಾಲ್ಕು ಮೊಬೈಲ್ ಫೋನ್ ಮತ್ತು ನಾಲ್ಕು ಸಾವಿರ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.