ADVERTISEMENT

ಸುರಕ್ಷೆಗೆ 1000 ಸಿಬ್ಬಂದಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2011, 19:30 IST
Last Updated 13 ಅಕ್ಟೋಬರ್ 2011, 19:30 IST

ಬೆಂಗಳೂರು: `ಮೆಟ್ರೊ~ ರೈಲು ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇರುವುದರಿಂದ ಭದ್ರತೆಗೆ ಒಂದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ತಿಳಿಸಿದರು.

`ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ. ಮೆಟ್ರೊ ಬಗ್ಗೆ ಜನರಲ್ಲಿ ನಿರೀಕ್ಷೆ ಹೆಚ್ಚಿರುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಸೂಕ್ತ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ~ ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ಗುರುವಾರ ತಿಳಿಸಿದರು.

ನೂರು ಮಂದಿ ಅಧಿಕಾರಿಗಳು ಸೇರಿದಂತೆ ಒಂದು ಸಾವಿರ ಜನರನ್ನು ನಿಯೋಜಿಸಲಾಗುತ್ತದೆ. 12 ತುಕಡಿ ಕೆಎಸ್‌ಆರ್‌ಪಿ ನಿಯೋಜಿಸಲಾಗುತ್ತದೆ. ಜಂಟಿ ಪೊಲೀಸ್ ಕಮಿಷನರ್‌ಗಳಾದ ಬಿ. ದಯಾನಂದ ಮತ್ತು ಬಿ.ಎನ್.ಎಸ್.ರೆಡ್ಡಿ ಅವರು ಉಸ್ತುವಾರಿ ವಹಿಸಲಿದ್ದಾರೆ. ಉದ್ಘಾಟನೆಯ ನಂತರವೂ ಭದ್ರತೆ ಮುಂದುವರೆಯಲಿದೆ.
 
ಪ್ರತಿ ನಿಲ್ದಾಣಕ್ಕೆ ಎಸ್‌ಐ, ನಾಲ್ಕು ಮಂದಿ ಮುಖ್ಯ ಕಾನ್‌ಸ್ಟೇಬಲ್, ಆರು ಮಂದಿ ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗುತ್ತದೆ. ಭದ್ರತಾ ವ್ಯವಸ್ಥೆಯನ್ನು ಪರಿಸ್ಥಿತಿಗೆ ತಕ್ಕಂತೆ ಬದಲಾಯಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.