ADVERTISEMENT

ಸೇವೆ ಕಾಯಂಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಮೇ 2018, 19:58 IST
Last Updated 28 ಮೇ 2018, 19:58 IST
ನಗರದ ಪ್ರಧಾನ ಅಂಚೆ ಕಚೇರಿ ಎದುರು ಗ್ರಾಮೀಣ ಅಂಚೆ ಸೇವಕರು ಸೋಮವಾರ ಪ್ರತಿಭಟನೆ ನಡೆಸಿದರು
ನಗರದ ಪ್ರಧಾನ ಅಂಚೆ ಕಚೇರಿ ಎದುರು ಗ್ರಾಮೀಣ ಅಂಚೆ ಸೇವಕರು ಸೋಮವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ಸೇವೆ ಕಾಯಂ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ (ಎಐಜಿಡಿಎಸ್‌ಯು) ನಗರದ ಪ್ರಧಾನ ಅಂಚೆ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.

ಗ್ರಾಮೀಣ ಅಂಚೆ ಸೇವಕರನ್ನು ಕಡೆಗಣಿಸಲಾಗುತ್ತಿದೆ. ಕನಿಷ್ಠ ವೇತನ, ಬಡ್ತಿ, ಪಿಂಚಣಿ, ರಜೆ ಸೇರಿದಂತೆ ಕಾರ್ಮಿಕರಿಗೆ ಲಭಿಸಬೇಕಾದ ಯಾವುದೇ ಸೌಲಭ್ಯಗಳು ಲಭಿಸುತ್ತಿಲ್ಲ. ನೌಕರರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ದೇಶದಾದ್ಯಂತ ಸುಮಾರು 2.85 ಲಕ್ಷ ಗ್ರಾಮೀಣ ಅಂಚೆ ಸೇವಕರಿದ್ದಾರೆ. ವೇತನ ನೀಡುವಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶ ಎಂದು ನೌಕರರ ಮಧ್ಯೆ ತಾರತಮ್ಯ ಎಸಗಲಾಗುತ್ತಿದೆ. ಈ ತಾರತಮ್ಯ ಹೋಗಲಾಡಿಸಬೇಕು ಎಂದು ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ದೇಶದಾದ್ಯಂತ ಇರುವ ಗ್ರಾಮೀಣ ಅಂಚೆ ಸೇವಕರ ಸ್ಥಿತಿಗತಿ ಬಗ್ಗೆ ಕಮಲೇಶ್ಚಂದ್ರ ಸಮಿತಿ ಸಮಗ್ರ ವರದಿ ಸಲ್ಲಿಸಿದೆ. ಆದರೆ, ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು.

ಕನಿಷ್ಠ ವೇತನವನ್ನು ₹10 ಸಾವಿರದಿಂದ ₹35 ಸಾವಿರಕ್ಕೆ ಏರಿಕೆ ಮಾಡಬೇಕು, ವಾರ್ಷಿಕ ಶೇ 3ರಷ್ಟು ವೇತನ ಹೆಚ್ಚಳ ಮಾಡಬೇಕು, ಅಂಚೆ ಸೇವಕರ ನೌಕರರ ಮಕ್ಕಳ ವಿದ್ಯಾಭ್ಯಾಸದ ವೆಚ್ಚಕ್ಕಾಗಿ ವಾರ್ಷಿಕ ₹6 ಸಾವಿರ ನೀಡಬೇಕು ಎಂದು ಅವರು ಆಗ್ರಹಿಸಿದರು.

ಬೇಡಿಕೆ ಈಡೇರಿಸುವರೆಗೆ ಹೋರಾಟ ಕೈಬಿಡುವುದಿಲ್ಲ. ಪ್ರತಿಭಟನೆಗೆ ಮಣಿಯದಿದ್ದರೆ, ಹೋರಾಟ ತೀವ್ರಗೊಳಿಸಲಾಗುವುದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.