ADVERTISEMENT

ಸೇವೆ ಕಾಯಂ: ಅಧಿಕಾರಿಗಳ ಸಭೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2012, 18:30 IST
Last Updated 3 ಅಕ್ಟೋಬರ್ 2012, 18:30 IST

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸೇವೆಯನ್ನು ಕಾಯಂ ಮಾಡುವ ಸಂಬಂಧ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ರಾಜ್ಯದಲ್ಲಿ ಸುಮಾರು 14 ಸಾವಿರ ದಿನಗೂಲಿ ನೌಕರರಿದ್ದಾರೆ. ಸೇವೆ ಕಾಯಂ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದು, ಈ ಹಿನ್ನೆಲೆಯಲ್ಲಿ ಶೆಟ್ಟರ್ ಅವರು `ಕೃಷ್ಣಾ~ದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
`ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದಿನಗೂಲಿ ನೌಕರರ ಸೇವೆ ಕಾಯಂ ಮಾಡುವುದು ಕಷ್ಟ~ ಎಂದು ಅಧಿಕಾರಿಗಳು, ಶೆಟ್ಟರ್ ಅವರಿಗೆ ವಿವರಣೆ ನೀಡಿದರು ಎನ್ನಲಾಗಿದೆ.

ಈ ಎಲ್ಲ ಸಲಹೆಗಳ ನಡುವೆಯೂ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಮುಂದಿನ ಸಚಿವ ಸಂಪುಟ ಸಭೆಗೆ ತರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಇಂಗಿತ ವ್ಯಕ್ತಪಡಿಸಿದರು ಎಂದು ಗೊತ್ತಾಗಿದೆ.
 
ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ವಿ.ನಾಗರಾಜನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜೀವ್ ಕುಮಾರ್ ಇತರರು ಸಭೆಯಲ್ಲಿ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.