ADVERTISEMENT

ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅಗತ್ಯ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಬೆಂಗಳೂರು: `ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯೆಯ ಮಹತ್ವ ಹೆಚ್ಚಾಗಿದ್ದು, ವಿದ್ಯೆ ಇಲ್ಲದೇ ಬಾಳುವುದು ಕಷ್ಟಕರವಾಗಿದೆ~ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪಿ. ಶಾರದಮ್ಮ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಹಕಾರ ಸಂಘದ 98ನೇ ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

`ಇಂದಿನ ಮಕ್ಕಳು ನಾಳಿನ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವಲ್ಲಿ ವಿದ್ಯೆಯ ಪಾತ್ರ ಹೆಚ್ಚಿನದ್ದಾಗಿದೆ. ಉತ್ತಮ ಭವಿಷ್ಯಕ್ಕಾಗಿ ಮಕ್ಕಳು ಓದಿನ ಕಡೆಗೆ ಹೆಚ್ಚು ಒಲವು ತೋರಬೇಕು. ಮಕ್ಕಳ ಸಾಧನೆಗೆ ಪೋಷಕರು ಪ್ರೋತ್ಸಾಹ ನೀಡಬೇಕು~ ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಸಂಘದ ಸದಸ್ಯರ ಸುಮಾರು 150 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಬಿಬಿಎಂಪಿ ಉಪ ಮೇಯರ್ ಎಸ್. ಹರೀಶ್, ಆಡಳಿತ ಪಕ್ಷದ ನಾಯಕ ಬಿ.ಆರ್. ನಂಜುಂಡಪ್ಪ, ವಿರೋಧ ಪಕ್ಷದ ನಾಯಕ ಎಂ. ಉದಯಶಂಕರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಬಿಬಿಎಂಪಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಎ.ಅಮೃತರಾಜ್ ಮತ್ತಿತರರು ಭಾಗವಹಿಸಿದ್ದರು.

ಸಮಾರಂಭಕ್ಕೂ ಮುನ್ನ ಸುಗಮ ಸಂಗೀತ ಗಾಯಕ ಆನಂದ ಮಾದಲಗೆರೆ ಮತ್ತು ಅವರ ತಂಡದಿಂದ ಗೀತಗಾಯನ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.