ADVERTISEMENT

ಹಂದಿ ಜೋಗಿ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 20:00 IST
Last Updated 8 ಅಕ್ಟೋಬರ್ 2012, 20:00 IST

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಶಾಂತಿನಗರ ಬಸ್ ನಿಲ್ದಾಣದ ಮುಂದೆ ಕನ್ನಡ ಯುವಜನ ಸಂಘದ ಸದಸ್ಯರು ಧರಣಿ ನಡೆಸಿದರು. ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ವಿರೋಧಿಸಿ ಬಿಬಿಎಂಪಿ ಸದಸ್ಯರು ಮೈಸೂರು ರಸ್ತೆಯ ಶಿರಸಿ ವೃತದಿಂದ ಗೋಪಾಲನ್‌ಮಾಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದರಿಂದ ಮೈಸೂರು ರಸ್ತೆಯಲ್ಲಿ ಕೆಲ ಕಾಲ ವಾಹನ ದಟ್ಟಣೆ ಉಂಟಾಯಿತು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ನಿವಾಸದ ಮುಂದೆ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಮತ್ತು ಒಕ್ಕೂಟದ ಸದಸ್ಯರು ಸತ್ಯಾಗ್ರಹ ನಡೆಸಿದರು.

ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ಮಾತನಾಡಿ, `ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಯವರು ಹೋರಾಟಕ್ಕೆ ಮುಂದಾಗುತ್ತಿಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಆಗುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲ~ ಎಂದರು.

`ಕೇಂದ್ರ ಸರ್ಕಾರ ಹಾಗೂ ಸುಪ್ರೀಂಕೋರ್ಟ್ ರಾಜ್ಯದ ವಿಚಾರದಲ್ಲಿ ವೈಜ್ಞಾನಿಕ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ. ರಾಜ್ಯದ ಜನತೆಗೆ ಕುಡಿಯುವ ನೀರಿಗೇ ಅಭಾವವಿರುವ ಸಂದರ್ಭದಲ್ಲಿ ತಮಿಳುನಾಡಿನ ರೈತರಿಗೆ ಹೆಚ್ಚುವರಿ ಬೆಳೆಗೆ ನೀರು ನೀಡಬೇಕು ಎಂಬುದು ಅವೈಜ್ಞಾನಿಕ ವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.

ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ನಂತರ ಬಿಡುಗಡೆಗೊಳಿಸಿದರು.
ಬೆಂಗಳೂರು ನಗರ ಹಂದಿ ಜೋಗಿ ಸಂಘದ ಸದಸ್ಯರು ಮಡಿವಾಳ ಚೆಕ್‌ಪೋಸ್ಟ್ ರಸ್ತೆಯಲ್ಲಿ ಹಂದಿಗಳೊಂದಿಗೆ ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
 
ತಮಿಳುನಾಡಿಗೆ ನೀರು ಬಿಡದಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಕಿಸಾನ್ ಸಂಘದ ಕರ್ನಾಟಕ ವಲಯದ ಕಾರ್ಯಕರ್ತರು ಪುರಭವನದ ಎದುರು ಪ್ರತಿಭಟನೆ ನಡೆಸಿದರು.

ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕಾಂಗ್ರೆಸ್ ಸಮಿತಿಯ ಸದಸ್ಯರು ಕಮಲಾನಗರದ ಶಂಕರ್‌ನಾಗ್ ಬಸ್‌ನಿಲ್ದಾಣದಿಂದ ಪಂಜಿನ ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.