ಯಲಹಂಕ: ಯುವ ಕಾಂಗ್ರೆಸ್ನ ಸದಸ್ಯತ್ವ ನೋಂದಣಿ ಮಾಡಿಸುತ್ತಿದ್ದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಸಂಪಿಗೆಹಳ್ಳಿ ಗ್ರಾಮದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಪೊಲೀಸ್ ಠಾಣೆಯ ಮುಂಭಾಗಕ್ಕೆ ಬಂದು ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಶ್ರೀನಿವಾಸರಾಜು, ಕೋಗಿಲು ಬಡಾವಣೆಯ ಟಿಪ್ಪು ನಗರದಲ್ಲಿ ಪಕ್ಷದ ಕಾರ್ಯಕರ್ತರು ಸದಸ್ಯತ್ವ ನೋಂದಾಯಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ದಾಂದಲೆ ನಡೆಸಿದರು. ಇದಲ್ಲದೇ, ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಠಾಣೆಗೆ ದೂರು ನೀಡಲಾಯಿತು.
ಆರೋಪಿಗಳನ್ನು ಬಂಧಿಸಿದ ಪೊಲೀಸರು ರಾಜಕೀಯ ಒತ್ತಡದಿಂದಾಗಿ ಕೇವಲ ಒಂದು ಗಂಟೆಯಲ್ಲಿ ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಂಪಿಗೆಹಳ್ಳಿ ಉಪ ವಿಭಾಗದ ಎಸಿಪಿ ರಾಮಚಂದ್ರಪ್ಪ, ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಸದಸ್ಯ ದಾನೇಗೌಡ, ಬ್ಯಾಟರಾಯನಪುರ ಹಾಗೂ ಕೆ.ಆರ್. ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಆಂಜಿನಪ್ಪ ಮತ್ತಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.