ADVERTISEMENT

ಹಾಲಿನ ಟ್ಯಾಂಕರ್‌ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರ ಸಾವು

​ಪ್ರಜಾವಾಣಿ ವಾರ್ತೆ
Published 2 ಜೂನ್ 2012, 18:55 IST
Last Updated 2 ಜೂನ್ 2012, 18:55 IST

ಬೆಂಗಳೂರು: ವಿಜಯಪುರ ರಸ್ತೆಯ ಕುರುಬರ ಕುಂಟೆ ಬಳಿ ಶುಕ್ರವಾರ ರಾತ್ರಿ ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದಾರೆ.

ದೇವನಹಳ್ಳಿಯ ಮಧು (23) ಮತ್ತು ಗೌರಿಬಿದನೂರು ತಾಲ್ಲೂಕಿನ ಹರೀಶ್ (25) ಮೃತಪಟ್ಟವರು.

ಸ್ನೇಹಿತರಾಗಿದ್ದ ಅವರಿಬ್ಬರೂ ವೃತ್ತಿಯಲ್ಲಿ ಚಾಲಕರಾಗಿದ್ದರು. ಅವರು ರಾತ್ರಿ 10 ಗಂಟೆ ಸುಮಾರಿಗೆ ಬೈಕ್‌ನಲ್ಲಿ ವಿಜಯಪುರದಿಂದ ದೇವನಹಳ್ಳಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಬೈಕ್ ಚಾಲನೆ ಮಾಡುತ್ತಿದ್ದ ಮಧು, ಮುಂದೆ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ಗೆ ವಾಹನ ಗುದ್ದಿಸಿದ್ದಾರೆ. ಪರಿಣಾಮ ಅವರಿಬ್ಬರೂ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡರು. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡ ಮಧು ಸ್ಥಳದಲ್ಲೇ ಮೃತಪಟ್ಟರು. ಗಾಯಾಳು ಹರೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ.

ಟ್ಯಾಂಕರ್ ಚಾಲಕನನ್ನು ಬಂಧಿಸಿ ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವನಹಳ್ಳಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT