ADVERTISEMENT

ಹಾಲು ಉತ್ಪಾದಕರ ಹಿತ ಕಾಯಲು ಬದ್ಧ

​ಪ್ರಜಾವಾಣಿ ವಾರ್ತೆ
Published 29 ಮೇ 2012, 19:30 IST
Last Updated 29 ಮೇ 2012, 19:30 IST

ಹೊಸಕೋಟೆ: ಬೆಂಗಳೂರು ಹಾಲು ಒಕ್ಕೂಟ ಹಾಲು ಉತ್ಪಾದನೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲಿದ್ದು, ಉತ್ಪಾದಕರ ಹಿತ ಕಾಪಾಡುವಲ್ಲಿ ಒಕ್ಕೂಟ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿರುವುದನ್ನು ಸಚಿವ ಬಿ.ಎನ್.ಬಚ್ಚೇಗೌಡ ಶ್ಲಾಘಿಸಿದರು.

ಬೆಂಗಳೂರು ಹಾಲು ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಇಲ್ಲಿ ನಡೆದ ಹೊಸಕೋಟೆ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ಪ್ರಾದೇಶಿಕ ಸಭೆಯಲ್ಲಿ ಉತ್ಪಾದಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಿ ಅವರು ಮಾತನಾಡಿದರು.

 ಹಾಲು ಉತ್ಪಾದನೆ ಹೆಚ್ಚಿಸುವಲ್ಲಿ ಸರ್ಕಾರ ಎರಡು ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದು, ಹೊಸಕೋಟೆ ತಾಲ್ಲೂಕಿಗೊಂದಕ್ಕೇ ಸುಮಾರು 21 ಕೋಟಿ ರೂಪಾಯಿ ನೀಡಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ನಿರ್ದೇಶಕ ಸಿ.ಮಂಜುನಾಥ್, ಜನಶ್ರೀ ವಿಮಾ ಯೋಜನೆಯಡಿ ತಾಲ್ಲೂಕಿನ ಹಾಲು ಉತ್ಪಾದಕರ 800 ಮಕ್ಕಳಿಗೆ 8.36 ಲಕ್ಷ ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದು ಹೇಳಿದರು. ಸದಸ್ಯರು ತಪ್ಪದೆ ವಿವಿಧ ವಿಮೆ ಮಾಡಿಸುವಂತೆ ಮನವಿ ಮಾಡಿದರು.

ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ, ವ್ಯವಸ್ಥಾಪಕ ನಿರ್ದೇಶಕ ಡಾ.ಲಕ್ಷ್ಮಣರೆಡ್ಡಿ ಮಾತನಾಡಿದರು. ನಿರ್ದೇಶಕ ಮುನಿಸುಬ್ಬಣ್ಣ, ದೊಡ್ಡಹುಲ್ಲೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ಉಪಸ್ಥಿತರಿದ್ದರು. ಡಾ.ರಾಘವನ್ ಸ್ವಾಗತಿಸಿದರು. ಕಲ್ಯಾಣ ಟ್ರಸ್ಟ್ ವತಿಯಿಂದ ಫಲಾನುಭವಿಗಳಿಗೆ ಸೌಲಭ್ಯಗಳ ಚೆಕ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.