ADVERTISEMENT

ಹೆಣ್ಣು ಮಗು ಕೊಲ್ಲಲು ಯತ್ನಿಸಿದ ಆರೋಪಿಗೆ ಶಿಕ್ಷೆ: ಆಯೋಗ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2012, 19:30 IST
Last Updated 9 ಏಪ್ರಿಲ್ 2012, 19:30 IST

ಬೆಂಗಳೂರು:  ಹೆಣ್ಣು ಮಗು ಎಂಬ ಕಾರಣಕ್ಕೆ ತಂದೆಯೇ ಕೊಲ್ಲಲು ಯತ್ನಿಸಿದ ಮೂರು ತಿಂಗಳ ಮಗುವಿನ ಪರಿಸ್ಥಿತಿ ಗಂಭೀರವಾಗಿದೆ. ಮಗುವಿನ ತಲೆಗೆ ತೀವ್ರ ಪೆಟ್ಟಾಗಿದ್ದು, ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

`ಮಗುವಿನ ಮೇಲೆ ತಂದೆಯೇ ರಕ್ಕಸತನ ಪ್ರದರ್ಶಿಸಿದ್ದಾನೆ. ಹೆಣ್ಣು ಮಕ್ಕಳ ರಕ್ಷಣೆಗಾಗಿ ಎಷ್ಟೇ ಕಾನೂನುಗಳಿದ್ದರೂ ಅವು ಸಮರ್ಪಕವಾಗಿ ಜಾರಿಗೆ ಬರುತ್ತಿಲ್ಲ ಎಂಬುದಕ್ಕೆ ಈ ಪ್ರಕರಣವೇ ಸ್ಪಷ್ಟ ನಿದರ್ಶನ. ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಇಂತಹ ಶೋಷಣೆಗಳು ನಡೆಯುತ್ತಲೇ ಇವೆ. ಆದರೆ ಇವು ಹೆಚ್ಚು ಬೆಳಕಿಗೆ ಬರುತ್ತಿಲ್ಲ~ ಎಂದು ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ನೀನಾ ಪಿ. ನಾಯಕ್ `ಪ್ರಜಾವಾಣಿ~ಗೆ ತಿಳಿಸಿದರು.

`ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ಮಗು ಹೆಣ್ಣು ಎಂಬ ಕಾರಣಕ್ಕೆ ಮಗುವನ್ನು ಕೊಲ್ಲಲು ಯತ್ನಿಸಿರುವ ಆರೋಪಿ ತಂದೆಗೆ ತಕ್ಕ ಶಿಕ್ಷೆಯಾಗಬೇಕು. ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು~ ಎಂದರು.

`ಮಗುವಿನ ಮೆದುಳಿನಲ್ಲಿ ಉಂಟಾಗಿರುವ ರಕ್ತಸ್ರಾವದಿಂದಾಗಿ ಮಗುವಿನ ಉಸಿರಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಸದ್ಯ ಕೃತಕ ಉಸಿರಾಟ ವ್ಯವಸ್ಥೆಯನ್ನು ಮಾಡಲಾಗಿದೆ. ಮಗುವನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ~ ಎಂದು ವಾಣಿವಿಲಾಸ ಆಸ್ಪತ್ರೆಯ ವೈದ್ಯೆ ಪ್ರೇಮಲತಾ ತಿಳಿಸಿದ್ದಾರೆ.

ನ್ಯಾಯಾಂಗ ಬಂಧನ: ಮಗುವಿನ ತಂದೆ ಉಮ್ಮರ್ ಫಾರೂಖ್‌ನನ್ನು ಬಂಧಿಸಿರುವ ಕಾಡುಗೊಂಡನಹಳ್ಳಿ ಪೊಲೀಸರು ಆತನನ್ನು ನಗರದ 11ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪರಪ್ಪನ ಅಗ್ರಹಾರಕ್ಕೆ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಕೊಲೆ ಯತ್ನ, ವರದಕ್ಷಿಣೆ ಕಿರುಕುಳ, ವರದಕ್ಷಿಣೆ ನಿಷೇಧ ಕಾಯ್ದೆ ಹಾಗೂ ಬಾಲಾಪರಾಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮತ್ತೊಂದು ಸುದ್ದಿ-ಪುಟ 7

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.