ಬೆಂಗಳೂರು: ನಗರದ ಸಿಟಿ ರೈಲ್ವೆ ನಿಲ್ದಾಣದಿಂದ ಯಶವಂಪುರ ರೈಲ್ವೆ ನಿಲ್ದಾಣದವರೆಗಿನ ರೈಲು ಹಳಿಗಳ ಇಕ್ಕೆಲಗಳಲ್ಲಿರುವ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯ ನಡೆದಿದೆ ಎಂದು ರೈಲ್ವೆ ಇಲಾಖೆ ಹೈಕೋರ್ಟ್ಗೆ ಶುಕ್ರವಾರ ತಿಳಿಸಿದೆ.ಶ್ರೀರಾಮಪುರ ಬಡಾವಣೆ ಬಳಿ ಮಲ್ಲೇಶ್ವರ ಹಾಗೂ ಯಶವಂತಪುರ ಮೂಲಕ ಹಾದು ಹೋಗುವ ಬೆಂಗಳೂರು- ಮುಂಬೈ ಬ್ರಾಡ್ಗೇಜ್ ರೈಲು ಹಳಿಗಳ ಇಕ್ಕೆಲಗಳಲ್ಲಿ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದಾಗಿ ದೂರಿ ಎಚ್ಎನ್ಎ ಪ್ರಸಾದ್ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಈ ಮಾಹಿತಿಯನ್ನು ಇಲಾಖೆ ನೀಡಿದೆ.
50 ಎಕರೆಗೂ ಅಧಿಕ ಪ್ರದೇಶದಲ್ಲಿ ಅಕ್ರಮವಾಗಿ ಹಲವಾರು ದೇವಾಲಯಗಳು ಹುಟ್ಟಿಕೊಂಡಿವೆ. ಬೀದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವುದು ಅರ್ಜಿದಾರರ ದೂರಾ ಗಿತ್ತು. ಒತ್ತುವರಿ ತೆರವಿಗೆ ಕ್ರಮ ತೆಗೆದುಕೊಂಡ ಇಲಾಖೆಯ ಹೇಳಿಕೆಯನ್ನು ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ನೇತೃತ್ವದ ವಿಭಾಗೀಯ ಪೀಠ ಅರ್ಜಿಯನ್ನು ಇತ್ಯರ್ಥಗೊಳಿಸಿತು.
ಆಚಾರ್ಯ ನೇಮಕ- ಕಾಯ್ದಿರಿಸಿದ ತೀರ್ಪು: ಭೂವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಹೈಕೋರ್ಟ್ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣದಲ್ಲಿ ಲೋಕಾಯುಕ್ತದ ಪರವಾಗಿ ವಾದಿಸಲು ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಆಗಿ ಸರ್ಕಾರ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಬಿಬಿಎಂಪಿ ಸದಸ್ಯ ಕಟ್ಟಾ ಜಗದೀಶ್ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ.
ಲೋಕಾಯುಕ್ತದ ಪರವಾಗಿ ವಾದ ಮಂಡಿಸಲು ವಕೀಲ ರಾಜೇಂದ್ರ ರೆಡ್ಡಿ ಅವರನ್ನು ಅಧಿಕೃತವಾಗಿ ಎಸ್ಪಿಪಿಯನ್ನಾಗಿ ಸರ್ಕಾರ ಈಗಾಗಲೇ ನೇಮಿಸಿರುವಾಗ ಆಚಾರ್ಯ ಅವರ ನೇಮಕಾತಿ ಸರಿಯಲ್ಲ. ಈ ಹಿನ್ನೆಲೆಯಲ್ಲಿ ನೇಮಕಾತಿಯನ್ನು ಅನೂರ್ಜಿತಗೊಳಿಸಬೇಕು ಎಂಬುದು ಜಗದೀಶ್ ವಾದ.ಆಚಾರ್ಯ ನೇಮಕಾತಿಯನ್ನು ಅಡ್ವೊಕೇಟ್ ಜನರಲ್ ಅಶೋಕ ಹಾರ್ನಹಳ್ಳಿ ಅವರು ಸಮರ್ಥಿಸಿಕೊಂಡರು. ವಾದ, ಪ್ರತಿವಾದ ಮುಗಿದ ಹಿನ್ನೆಲೆಯಲ್ಲಿ ತೀರ್ಪನ್ನು ಕಾಯ್ದಿರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.