ಬೆಂಗಳೂರು: ರಾಜ್ಯ ಹೈಕೋರ್ಟ್ ನೌಕರರಿಗೆ ನೀಡಬೇಕಿರುವ 2 ತಿಂಗಳ ವೇತನ ಹಾಗೂ ಬಾಕಿಯನ್ನು ಮಂಗಳವಾರದೊಳಗೆ ಪಾವತಿ ಮಾಡುವುದಾಗಿ ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿ ಎಸ್.ಎನ್. ಪ್ರಸಾದ್ ಹೈಕೋರ್ಟ್ಗೆ ಭರವಸೆ ನೀಡಿದ್ದಾರೆ.
‘ಹೈಕೋರ್ಟ್ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ವೇತನಶ್ರೇಣಿಯ ಅನುಸಾರ ವೇತನ ನಿಗದಿಪಡಿಸುವಂತೆ ಸುಪ್ರೀಂಕೋರ್ಟ್ ಆದೇಶವಿದ್ದರೂ ಸರ್ಕಾರ ನಮ್ಮ ವೇತನ ಪರಿಷ್ಕರಣೆ ಮಾಡಿಲ್ಲ’ ಎಂದು ಆಕ್ಷೇಪಿಸಿ ಹೈಕೋರ್ಟ್ ನೌಕರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಪ್ರಸಾದ್ ನ್ಯಾಯಪೀಠಕ್ಕೆ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದರು. ಇದೇ ವೇಳೆ ಪರಿಷ್ಕೃತ ವೇತನದ ಬಾಕಿಯನ್ನು ಜೂನ್ ಅಂತ್ಯದೊಳಗೆ ಪಾವತಿಸುವುದಾಗಿಯೂ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಯಿತು. ಜೊತೆಗೆ ಜೂ. 30ರಂದು ವರದಿ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.