ADVERTISEMENT

ಹೈ.ಕ ವಿಶೇಷ ಸ್ಥಾನಮಾನ: ಕೇಂದ್ರಕ್ಕೆ ನಿಯೋಗ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2011, 19:55 IST
Last Updated 4 ಮಾರ್ಚ್ 2011, 19:55 IST

ಬೆಂಗಳೂರು: ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ಮಾಡಿ ಹೈದರಾಬಾದ್-ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಕೇಂದ್ರವನ್ನು ಒತ್ತಾಯಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳ ನಾಯಕರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆದಿದ್ದ ಸಭೆಯಲ್ಲಿ ಹೈ-ಕ ಭಾಗದ ಶಾಸಕರು ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ‘ಅಧಿವೇಶನ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಪ್ರಧಾನಿ ಅವರನ್ನು ಭೇಟಿ ಮಾಡಲು ದಿನಾಂಕ ನಿಗದಿಪಡಿಸಲು ನಿರ್ಧರಿಸಲಾಯಿತು. ಹೈ-ಕ ಅಭಿವೃದ್ಧಿಯಾಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ಸಭೆಯ ನಂತರ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

‘ಹೈ-ಕ ವಿಶೇಷ ಸ್ಥಾನಮಾನ ನೀಡುವಂತೆ ಹಿಂದೊಮ್ಮೆ ರಾಜ್ಯ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಅಂದಿನ ಕೇಂದ್ರ ಗೃಹ ಸಚಿವ ಎಲ್.ಕೆ. ಅಡ್ವಾಣಿ ತಿರಸ್ಕರಿಸಿದ್ದರು. ಈಗ ಪ್ರಧಾನಿ ಮನಮೋಹನ ಸಿಂಗ್ ಅವರು ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸಬಹುದೇ? ಎಂದು ರಾಜ್ಯದ ಅಭಿಪ್ರಾಯ ಕೇಳಿದ್ದಾರೆ.

ಇದು ಸೂಕ್ತವಲ್ಲ. ಸ್ಥಳೀಯರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 371- ಡಿ ವಿಧಿಗೆ ತಿದ್ದುಪಡಿ ಮಾಡುವುದೇ ಸೂಕ್ತ ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು’ ಎಂದು ಅವರು ಹೇಳಿದರು.ಜೆಡಿಎಸ್‌ನ ಎಚ್.ಡಿ. ರೇವಣ್ಣ ಮಾತನಾಡಿ, ‘ಆಂಧ್ರದ ತೆಲಂಗಾಣಕ್ಕಿಂತ ಹೈ-ಕ ಪ್ರದೇಶ ಹಿಂದುಳಿದಿದೆ. ಅಭಿವೃದ್ಧಿಪಡಿಸಲು ವಿಶೇಷ ಸ್ಥಾನಮಾನ ನೀಡಬೇಕಾಗಿರುವುದು ಅನಿವಾರ್ಯ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.