ಬೆಂಗಳೂರು:ನಗರದ ಅತಿದೊಡ್ಡ ಮಲ್ಟಿ ಸ್ಪೆಷಾಲಿಟಿ ಸರ್ಕಾರಿ ಆಸ್ಪತ್ರೆ ಎನಿಸಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗವಿಕಲರಿಗಾಗಿ ಸೂಕ್ತವಾದ ಶೌಚಾಲಯ ವ್ಯವಸ್ಥೆಯಿಲ್ಲ. ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತ ಕೆ.ಎಸ್.ರಾಜಣ್ಣ ಅವರು ಆಸ್ಪತ್ರೆಯಲ್ಲಿ ಅಂಗವಿಕಲರಿಗಾಗಿ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇಲ್ಲದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
‘ನಗರದಲ್ಲಿರುವ ಎಲ್ಲ ಆಸ್ಪತ್ರೆಗಳಿಗೆ ಪತ್ರ ಬರೆದು ಅಂಗವಿಕಲರಿಗಾಗಿ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಲಾಗಿತ್ತು. ಆದರೆ, ಇಲ್ಲಿ ಆ ವ್ಯವಸ್ಥೆಯನ್ನು ಇನ್ನೂ ಅಳವಡಿಸಿಕೊಂಡಿಲ್ಲ. ಆಸ್ಪತ್ರೆಯ ಹೊಸ ಕಟ್ಟಡದಲ್ಲೂ ಅಂಗವಿಕಲರಿಗಾಗಿ ಸೂಕ್ತ ಶೌಚಾಲಯಗಳಿಲ್ಲ. ತಿಂಗಳೊಳಗೆ ಅಂಗವಿಕಲರಿಗಾಗಿ ಶೌಚಾಲಯಗಳನ್ನು ನಿರ್ಮಿಸುವಂತೆ ಆಸ್ಪತ್ರೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ರಾಜಣ್ಣ ತಿಳಿಸಿದರು.
‘ಅಂಗವಿಕಲರ ಪ್ರಮಾಣ ಪತ್ರ ಪಡೆಯಲು ಆಸ್ಪತ್ರೆಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಬಗ್ಗೆಯೂ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ಲಂಚ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಅವ್ಯವಸ್ಥೆಯನ್ನು ತಪ್ಪಿಸಲು ಆಧಾರ್ ಮಾದರಿಯಲ್ಲಿ ಅಂಗವಿಕಲರ ಮಾಹಿತಿ ಸಂಗ್ರಹಿಸಿ ಪ್ರಮಾಣ ಪತ್ರ ನೀಡುವ ವ್ಯವಸ್ಥೆ ಜಾರಿಗೆ ಬರಬೇಕು’ ಎಂದು ಅವರು ಒತ್ತಾಯಿಸಿದರು.
‘ಆಸ್ಪತ್ರೆಯಲ್ಲಿ ಆದಷ್ಟು ಬೇಗ ಅಂಗವಿಕಲರಿಗಾಗಿ ಶೌಚಾಲಯಗಳನ್ನು ನಿರ್ಮಿಸಲಾಗುವುದು’ ಎಂದು ಆಸ್ಪತ್ರೆಯ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಪಿ.ಕೆ.ದೇವಿದಾಸ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.