ADVERTISEMENT

ರಾಷ್ಟ್ರೀಯ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ವಿರೋಧ: ಸಿ.ಎಚ್.ವೆಂಕಟಾಚಲಂ‌

​ಪ್ರಜಾವಾಣಿ ವಾರ್ತೆ
Published 8 ಜುಲೈ 2023, 23:29 IST
Last Updated 8 ಜುಲೈ 2023, 23:29 IST
ಕೆನರಾ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯ 10ನೇ ರಾಜ್ಯ ಸಮ್ಮೇಳನದಲ್ಲಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ‌ ಅವರು ಮಾತನಾಡಿದರು.
ಕೆನರಾ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯ 10ನೇ ರಾಜ್ಯ ಸಮ್ಮೇಳನದಲ್ಲಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ‌ ಅವರು ಮಾತನಾಡಿದರು.   

ಬೆಂಗಳೂರು: ‘ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಉಳಿಯಬೇಕು. ಯಾವ ಕಾರಣಕ್ಕೂ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ‌ ಹೇಳಿದರು.

ಕೆನರಾ ಬ್ಯಾಂಕ್ ಉದ್ಯೋಗಿಗಳ ಸಂಘಟನೆಯು, ನಗರದಲ್ಲಿ ಆಯೋಜಿಸಿರುವ ಎರಡು ದಿನಗಳ ಕಾಲ ನಡೆಯಲಿರುವ 10ನೇ ರಾಜ್ಯ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಜನರ ಹಣ, ಜನರ ಬಳಿಯೇ ಸುರಕ್ಷಿತವಾಗಿ ಇರಬೇಕಾದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಇರಬೇಕು. ಜನರ ಹಣ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕೇ ಹೊರತು ಬಂಡವಾಳಶಾಹಿಗಳ ಹಾಗೂ ಕಂಪನಿಗಳ ಏಳಿಗೆಗೆ ವಿನಿಯೋಗ ಆಗಬಾರದು’ ಎಂದು ಎಚ್ಚರಿಸಿದರು.

ADVERTISEMENT

‘ಜನಧನ್ ಯೋಜನೆ’ಯ ಶೇ 99 ಖಾತೆಗಳು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ತೆರೆದಿವೆ. ಇಡೀ ದೇಶದಲ್ಲಿ ಕೇವಲ ಶೇ 7ರಷ್ಟು ಮಾತ್ರ ಸಾಲ ಮಹಿಳೆಯರಿಗೆ ನೀಡಲಾಗಿದೆ. ಖಾಸಗಿ ಬ್ಯಾಂಕ್‌ಗಳು ರೈತರಿಗೆ ಸಾಲ ನೀಡುವುದಿಲ್ಲ’ ಎಂದು ಹೇಳಿದರು.

‘ಖಾಸಗಿ ಬ್ಯಾಂಕ್‌ಗಳಲ್ಲಿ ದುರುಪಯೋಗ ಪ್ರಕರಣಗಳು ಹೆಚ್ಚಿವೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಹೆಚ್ಚಿನ ಉತ್ಸಾಹ ತೋರುತ್ತಿವೆ. ಇದಕ್ಕೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದರಿಂದ ಸದ್ಯಕ್ಕೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಉಳಿದುಕೊಂಡಿವೆ’ ಎಂದರು.

ಕೆನರಾ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಶ್ರೀಕೃಷ್ಣ, ‘ಒಕ್ಕೂಟವನ್ನು ಬಲಿಷ್ಠಗೊಳಿಸಬೇಕು’ ಎಂದು ಹೇಳಿದರು.

ಒಕ್ಕೂಟದ ವಿಜಯ್‌ ಭಾಸ್ಕರ್, ಕೆ.ಜಿ. ಪಣೀಂದ್ರ, ಅನಿರುದ್ಧ್ ಕುಮಾರ್, ಪ್ರಶಾಂತ್ ಕುಮಾರ್, ಶ್ರೀನಿವಾಸನ್, ಬಿ.ದೇವದಾಸ್ ರಾವ್ ಹಾಗೂ ರಾಜ್ಯ ಸಹ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.