ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಉಸಿರುಗಟ್ಟಿಯೇ ಸಾವಿಗೀಡಾಗಿದ್ದಾರೆ. ಕೆಲವರ ದೇಹದಲ್ಲಿ ಮೂಳೆಗಳು ಮುರಿದಿವೆ ಎಂಬ ವಿಚಾರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಿಂದ ಗೊತ್ತಾಗಿದೆ.
ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹಗಳನ್ನು ಬುಧವಾರ ರಾತ್ರಿಯೇ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಎಲ್ಲರ ಅಂತ್ಯಕ್ರಿಯೆಗಳು ಗುರುವಾರ ನೆರವೇರಿತ್ತು.
ಕಾಲ್ತುಳಿತದ ವೇಳೆ ಗಾಯಗೊಂಡಿರುವ ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದೇಹಿ, ಬೌರಿಂಗ್, ಮಣಿಪಾಲ್ ಹಾಗೂ ಸ್ಪರ್ಶ್ ಆಸ್ಪತ್ರೆಯಲ್ಲಿ ಕೆಲವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಐದಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕಾಲ್ತುಳಿತದ ವೇಳೆ ಗಾಯಗೊಂಡಿರುವ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶೀಘ್ರ ಮನೆಗೆ ಕಳುಹಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.