ADVERTISEMENT

13ರಂದು ವಿಪ್ರ ವೇದಿಕೆ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 19:59 IST
Last Updated 6 ಏಪ್ರಿಲ್ 2013, 19:59 IST

ಬೆಂಗಳೂರು: `ತ್ರಿಮತಸ್ಥ ಬ್ರಾಹ್ಮಣರನ್ನು ಒಂದುಗೂಡಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ `ವಿಪ್ರ ಹಿತರಕ್ಷಣಾ ವೇದಿಕೆ'ಯನ್ನು ಏ. 13ರಂದು ಉದ್ಘಾಟನೆ ಮಾಡಲಾಗುವುದು' ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ರೋಹಿತ್ ಸಿಂಹ ಅವರು ತಿಳಿಸಿದರು.

ಶನಿವಾರ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದ್ಮನಾಭನಗರದ ಪುಟ್ಟಲಿಂಗಯ್ಯ ಮೈದಾನದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಅವರು ನೂತನ ವೇದಿಕೆಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.

ಸ್ಮಾರ್ತ, ಮಾಧ್ವ ಮತ್ತು ಅಯ್ಯಂಗಾರ್ ಬ್ರಾಹ್ಮಣರನ್ನು ಒಂದುಗೂಡಿಸುವುದು, ಆರ್ಥಿಕವಾಗಿ ಹಿಂದುಳಿದ ವಿಪ್ರರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವುದು, ಸಮುದಾಯದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು, ವಿಪ್ರ ಸಮುದಾಯದ ದುರ್ಬಲರಿಗೆ ಆರೋಗ್ಯ ಶಿಬಿರ, ಸಾಮೂಹಿಕ ವಿಮೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶಗಳೊಂದಿಗೆ ವೇದಿಕೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ವೇದಿಕೆಯ ಘಟಕಗಳನ್ನು ಸ್ಥಾಪಿಸುವ ಮೂಲಕ ವಿಪ್ರ ಸಮುದಾಯದಲ್ಲಿರುವ ದುರ್ಬಲರಿಗೆ ಉತ್ತಮ ಸೇವೆ ನೀಡಲಾಗುವುದು ಎಂದರು. ವೇದಿಕೆಯ ಪದಾಧಿಕಾರಿಗಳಾದ ಪ್ರೊ.ವ್ಯಾಸರಾಜ್, ಸ್ವಾತಿ ವೆಂಕಟೇಶ್ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.