ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ಈ ವರ್ಷ ₹185 ಕೋಟಿ ಅನುದಾನ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಕುಲಪತಿ ಡಾ.ಟಿ.ಡಿ. ಕೆಂಪರಾಜು ತಿಳಿಸಿದರು.
ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯಕ್ಕೆ ಬೇಕಾಗುವ ಆಡಳಿತ ಮತ್ತು ಶೈಕ್ಷಣಿಕ ಕಟ್ಟಡಗಳು, ಶೈಕ್ಷಣಿಕ ಕೋರ್ಸ್ಗಳು, ವಿದ್ಯಾರ್ಥಿ ನಿಲಯಗಳು, ಗ್ರಂಥಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ತಾಂತ್ರಿಕ ಉಪಕರಣಗಳ ಅವಶ್ಯಕತೆಯನ್ನು ಪರಿಶೀಲಿಸಿ ₹355 ಕೋಟಿಯ ಪ್ರಸ್ತಾವವನ್ನು 2016ರ ಡಿಸೆಂಬರ್ನಲ್ಲಿ ಸಲ್ಲಿಸಲಾಗಿತ್ತು. ವಿ.ವಿ.ಯ ಆರಂಭಿಕ ಖರ್ಚುಗಳಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ₹3 ಕೋಟಿ ಮಾತ್ರ ಬಿಡುಗಡೆಯಾಗಿದೆ. ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.
'ವಿಶ್ವವಿದ್ಯಾಲಯವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಅಮರಾವತಿ ಗ್ರಾಮದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 172 ಎಕರೆ ಜಾಗವನ್ನು ಗುರುತಿಸಲಾಗಿದೆ. ಪ್ರಥಮ ಹಂತದಲ್ಲಿ 57 ಎಕರೆ ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಉಳಿದ 115 ಎಕರೆ ಎರಡು ತಿಂಗಳಲ್ಲಿ ವರ್ಗಾವಣೆಯಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
‘ಪ್ರಸ್ತುತ ಕೋಲಾರದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಾಲ್ಕು ಕೋರ್ಸ್ಗಳನ್ನು ಹಾಗೂ ಚಿಕ್ಕಬಳ್ಳಾಪುರದ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ಇಡಿ ಕೋರ್ಸ್ ನಡೆಸಲಾಗುತ್ತಿದೆ. 2018–19ನೇ ಶೈಕ್ಷಣಿಕ ವರ್ಷದಲ್ಲಿ ಮೂರು ಪದವಿ ಕೋರ್ಸ್ಗಳನ್ನು ಹಾಗೂ ಎಂಟು ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುತ್ತೇವೆ’ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.