ADVERTISEMENT

ಬೆಂಗಳೂರು: ಪೈಪ್‌ನಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವು

​ಪ್ರಜಾವಾಣಿ ವಾರ್ತೆ
Published 18 ಮೇ 2022, 11:04 IST
Last Updated 18 ಮೇ 2022, 11:04 IST
ದುರ್ಘಟನೆ ನಡೆದ ಸ್ಥಳ
ದುರ್ಘಟನೆ ನಡೆದ ಸ್ಥಳ   

ಬೆಂಗಳೂರು: ನಗರದಲ್ಲಿ ಸೋಮವಾರ ಸುರಿದ ಭಾರಿ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್‌ ಲೇಔಟ್‌ ಬಸ್‌ನಿಲ್ದಾಣದ ಬಳಿ ಪೈಪ್‌ಲೈನ್‌ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

‘ಬಿಹಾರದ ದೇವ್‌ಭರತ್‌ ಹಾಗೂ ಉತ್ತರಪ್ರದೇಶದ ಅಂಕಿತ್‌ಕುಮಾರ್‌ ಮೃತಪಟ್ಟವರು. ತ್ರಿಲೋಕ್‌ ಎಂಬುವರು ಅಪಾಯದಿಂದ ಪಾರಾಗಿದ್ದಾರೆ’ ಎಂದು ಜ್ಞಾನಭಾರತಿ ಠಾಣೆ ಪೊಲೀಸರು ತಿಳಿಸಿದ್ದಾರೆ.

‘ಉಪಕಾರ್‌ ಲೇಔಟ್‌ ಬಸ್‌ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದಲ್ಲಿ ಮೂವರು ಕಾರ್ಮಿಕರು ಇದ್ದರು. ಇಬ್ಬರು ಪೈ‍ಪ್‌ನಲ್ಲಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರು ಗುತ್ತಿಗೆದಾರರೂ ಅಪಾಯದಿಂದ ಪಾರಾಗಿದ್ದಾರೆ. ಜೆಸಿಬಿ ನೆರವಿನಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ನಾಲ್ವರ ಬಂಧನ: ಘಟನೆ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

‘ತ್ರಿಲೋಕ್‌ ಅವರು ನೀಡಿದ ದೂರಿನ ಆಧಾರದಲ್ಲಿ ಮೆಗಾ ಎಂಜಿನಿಯರಿಂಗ್‌ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್ ಎಸ್ಟೇಟ್‌ನ ಯೋಜನಾ ವ್ಯವಸ್ಥಾಪಕ ಶಿವಕುಮಾರ್‌, ಕಾಮಗಾರಿ ಎಂಜಿನಿಯರ್‌ ಹರೀಶ್‌ ರೆಡ್ಡಿ, ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್‌ ನರಸಿಂಹರಾಜು, ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುತ್ತಿದ್ದ ಮನೋಜ್‌ ಯಾದವ್ ಎಂಬುವರ ಮೇಲೆ ಪ್ರಕರಣ ದಾಖಲಿಸಿ, ನಾಲ್ವರನ್ನೂ ಬಂಧಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಲಾ ₹5 ಲಕ್ಷ ಪರಿಹಾರ

ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.